ಡಿಜೆ ಹಳ್ಳಿ – ಕೆಜಿ ಹಳ್ಳಿ ಗಲಭೆ ಸಂಬಂಧ ಸುತ್ತಮುತ್ತಲ ಪ್ರದೇಶಗಳಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಆ.21ರವರೆಗೂ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ.
ಅಹಿತಕರ ಘಟನೆಗಳು ಮರುಕಳಿಸದಂತೆ ಪ್ರತಿಬಂಧಕ ಕಾಯ್ದೆಯನ್ನು ಮುಂದುವರಿಸುವುದು ಸೂಕ್ತ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ನಿಷೇಧಾಜ್ಞೆಯನ್ನು ಆ.21 ಬೆಳಗ್ಗೆ 6 ಗಂಟೆವರೆಗೆ ವಿಸ್ತರಿಸಿ ಆದೇಶ ಹೊರೆಡಿಸಿದ್ದಾರೆ.
ಪ್ರಸ್ತುತ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ತೆರವುಗೊಳಿಸಿದಲ್ಲಿ ಗಲಭೆಯಲ್ಲಿ ಪಾಲ್ಗೊಂಡ ಆರೋಪಿಗಳು, ಅವರ ಬೆಂಬಲಿಗರು ಸಾಕ್ಷ್ಯಗಳನ್ನು ನಾಶಪಡಿಸಿ ಸಾಕ್ಷಿದಾರರನ್ನು ಬೆದರಿಸಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಕೃತ್ಯಗಳಲ್ಲಿ ತೊಡಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.