ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಾದ ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಬೆಂಬಲ ಕೋರಿ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಕುರಿತು ವಿವರವಾದ ಪತ್ರವನ್ನು ನೀಡಿ ಚರ್ಚೆ ನಡೆಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಬೆಂಗಳೂರು ಮೆಟ್ರೋ ಯೋಜನೆಯ 2ನೇ ಹಂತದ ಪರಿಷ್ಕೃತ ದರಕ್ಕೆ ತ್ವರಿತ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಮೆಟ್ರೋ 3ಎ ಹಂತಕ್ಕೆ ಕೇಂದ್ರ ಸರ್ಕಾರದ ಒಪ್ಪಿಗೆ ಅಗತ್ಯವಿದ್ದು, ಇದು ನಗರ ಸಾರಿಗೆ ಸಮಸ್ಯೆ ನಿವಾರಣೆಗೆ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದ್ದಾರೆ. ನಗರ ಮತ್ತು ಉಪನಗರಗಳ ನಡುವೆ ವೇಗದ ಸಂಪರ್ಕ ಕಲ್ಪಿಸುವ RRTS (ರೀಜಿಯನಲ್ ರಾಪಿಡ್ ಟ್ರಾನ್ಸಿಟ್ ಸಿಸ್ಟಂ) ಯೋಜನೆಗೂ ಕೇಂದ್ರದ ಬೆಂಬಲ ಕೋರಲಾಗಿದೆ.
ಇದರ ಜೊತೆಗೆ, ಮಿಟ್ಟಗಾನಹಳ್ಳಿ ಕೆರೆಯ ಬಳಿ ವಿವಿಧ ಹಂತದ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಅಗತ್ಯ ಅನುಮತಿ ನೀಡುವಂತೆ ಡಿಕೆಶಿ ಮನವಿ ಮಾಡಿದ್ದಾರೆ. ಈ ಯೋಜನೆಗಳಿಂದ ಬೆಂಗಳೂರು ನಗರದ ಪರಿಸರ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ ಹಾಗೂ ಜನಜೀವನದ ಗುಣಮಟ್ಟದಲ್ಲಿ ಸುಧಾರಣೆ ಆಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ವೇಗವಾಗಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಮೂಲಸೌಕರ್ಯ ಅಗತ್ಯಗಳನ್ನು ಮನಗಂಡು ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಆಶಿಸಿದ್ದಾರೆ. ನಗರ ಅಭಿವೃದ್ಧಿಗೆ ಸಂಬಂಧಿಸಿದ ಈ ಎಲ್ಲ ಯೋಜನೆಗಳಿಗೆ ಕೇಂದ್ರದ ಸಹಕಾರ ಅತ್ಯಗತ್ಯವೆಂದು ಅವರು ಹೇಳಿದ್ದಾರೆ.








