ಬೆಂಗಳೂರು: ಚನ್ನಪಟ್ಟಣಕ್ಕೆ ಡಿಕೆ ಸುರೇಶ್ (DK Suresh) ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಅಲ್ಲದೇ, ಸಂಡೂರಿಗೆ ಸಂಸದ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಸ್ಪರ್ಧೆ ಫೈನಲ್ ಎನ್ನಲಾಗುತ್ತಿದೆ.
ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಉಪಚುನಾವಣೆ ಅಭ್ಯರ್ಥಿ ಆಯ್ಕೆಯ ಕುರಿತು ಚರ್ಚೆ ನಡೆದಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದು, ಬಹುತೇಕ ಈ ಇಬ್ಬರೂ ಅಭ್ಯರ್ಥಿಗಳು ಫೈನಲ್ ಎನ್ನಲಾಗುತ್ತಿದೆ.
ಚನ್ನಪಟ್ಟಣಕ್ಕೆ (Channapatna) ಡಿಕೆ ಸುರೇಶ್ ಕಣದಿಂದ ಹಿಂದಕ್ಕೆ ಸರಿದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುತ್ತಾರೆ ಎಂದು ಸಭೆಯಲ್ಲಿ ಸಿಎಂ, ಡಿಸಿಎಂ ಹೇಳಿದ್ದಾರೆ. ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ (Annapurna) ಅವರಿಗೆ ಟಿಕೆಟ್ ಫೈನಲ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಇನ್ನೂ ಎರಡು ದಿನಗಳಲ್ಲಿ ಅಭ್ಯರ್ಥಿಗಳ ಘೋಷಣೆ ಆಗಲಿದೆ ಎಂದು ಸಿಎಂ ಹೇಳಿದ್ದಾರೆ. ಈ ವೇಳೆ ಮಾತನಾಡಿರುವ ಸಿಎಂ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಯ ದಾಳಿಯ ಬಗ್ಗೆಯೂ ನಾಯಕರು ಎಚ್ಚರಿಕೆ ವಹಿಸಬೇಕು. ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತಂತೆ ಸಮುದಾಯ ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸುತ್ತೇನೆ. ಮೂರು ಕ್ಷೇತ್ರಗಳ ಫಲಿತಾಂಶ ಮಹತ್ವದ್ದಾಗಿದ್ದು, ನಾವು ಗೆಲ್ಲುವ ಪ್ರಯತ್ನ ಮಾಡಬೇಕು.
ಎಲ್ಲರಿಗೂ ಜವಾಬ್ದಾರಿ ಹಂಚಿಕೆ ಮಾಡಿ ಪಟ್ಟಿ ಬಿಡುಗಡೆ ಮಾಡುತ್ತೇವೆ.ಅದರಂತೆ ಎಲ್ಲರೂ ವಹಿಸಿದ ಜಬಾಬ್ದಾರಿ ನಿಭಾಯಿಸಬೇಕು ಎಂದು ಸೂಚಿಸಿದ್ದಾರೆ.