ಬೆಂಗಳೂರು: ನೀನು ಎಲ್ಲೇ ಇದ್ದರೂ ಮರಳಿ ದೇಶಕ್ಕೆ ಬಂದು ಪೊಲೀಸರಿಗೆ ಶರಣಾಗು, ನನ್ನ ತಾಳ್ಮೆ ಪರೀಕ್ಷಿಸಬೇಡ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಜ್ವಲ್ ಗೆ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವರು ಎಚ್ಚರಿಕೆಯ ಪತ್ರ ಹಂಚಿಕೊಂಡಿದ್ದಾರೆ. ಎಚ್ಚರಿಕೆಗೆ ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಏನಾದರೂ ಗೌರವವಿದ್ದಲ್ಲಿ ಕೂಡಲೇ ಹಿಂದಿರುಗಿ ಬರಬೇಕು ಎಂದು ಪತ್ರದ ಮೂಲಕ ಹೇಳಿದ್ದಾರೆ.
ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾಧ್ಯಮದ ಜೊತೆ ಮಾತನಾಡಲು ತುಂಬಾ ಕಷ್ಟವಾಯಿತು. ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನಾದರೆ ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ಕುಮಾರಸ್ವಾಮಿ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಜ್ವಲ್ ನ ಚಟುವಟಿಕೆಗಳ ಕುರಿತು ನನಗೆ ಯಾವುದೇ ಮಾಹಿತಿ ಇರಲಿಲ್ಲ. ಅವನನ್ನು ರಕ್ಷಿಸುವ ಇರಾದೆಯೂ ಇಲ್ಲ. ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ದೇವೇಗೌಡರು ಹೇಳಿದ್ದಾರೆ.
ಪ್ರಜ್ವಲ್ ಎಲ್ಲಿದ್ದರೂ ಬಂದು ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು. ಇದನ್ನು ನಾನು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.