ಅಂಬೇಡ್ಕರ್ ಗೆ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್ : ಕಟೀಲ್
ಚಿತ್ರದುರ್ಗ : ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅತೀ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ದಲಿತ ಸಿಎಂ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆಗೆ ಚಿತ್ರದುರ್ಗದಲ್ಲಿ ತಿರುಗೇಟು ನೀಡಿದ ಕಟೀಲ್, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅತೀ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಮೊದಲ ಸಚಿವ ಸಂಪುಟದಲ್ಲಿಯೇ ಅಂಬೇಡ್ಕರ್ ನೋವಿನಿಂದ ಹೊರಗೆ ಬಂದಿದ್ದರು. ಅಂಬೇಡ್ಕರ್ ಲೋಕಸಭೆ ಚುನಾವಣೆಗೆ ನಿಂತಾಗ ಅವರ ಸಹಾಯಕನನ್ನು ಎದುರು ನಿಲ್ಲಿಸಿ ಸೋಲಿಸಿದರು. ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೂ ಜಾಗ ಕೊಡಲಿಲ್ಲ. ಅವರಿಗೆ ಭಾರತರತ್ನ ಪುರಸ್ಕಾರವನ್ನು ಕೊಡಲಿಲ್ಲ, ಅಂಬೇಡ್ಕರ್ ಗೆ ಭಾರತ ರತ್ನ ಕೊಟ್ಟಿದ್ದು ನಾವು. ಕಾಂಗ್ರೆಸ್ ಜಗಜೀವನ್ ರಾಮ್ ರನ್ನು ಪ್ರಧಾನಿ ಮಾಡಲಿಲ್ಲ ಎಂದು ಟಾಂಗ್ ನೀಡಿದರು.
ಇನ್ನು ಸಿದ್ದರಾಮಣ್ಣನ ಇತಿಹಾಸ ಹೇಳಬೇಕೆಂದರೆ ಕಾಂಗ್ರೆಸ್ ಗೆ ಬಂದು ಸಿಎಂ ಆದವರು. ಡಾ.ಜಿ.ಪರಮೇಶ್ವರ್ ಅವರಿಗೆ ಡಿಸಿಎಂ ಮಾಡಲಿಲ್ಲ, ಬದಲಾಗಿ ಸೋಲಿಸಿದರು. ಮಲ್ಲಿಕಾರ್ಜುನ ಖರ್ಗೆ, ಬಿ.ಎನ್.ಚಂದ್ರಪ್ಪ, ಧ್ರುವನಾರಾಯಣ, ಸೇರಿದಂತೆ ದಲಿತ ಮುಖಂಡರನ್ನು ಸೋಲಿಸಿದರು. ಈವತ್ತಿಗೂ ಖರ್ಗೆ, ಪರಮೇಶ್ವರ್ ಮುಂದಕ್ಕೆ ಬರಲು ಬಿಡುತ್ತಿಲ್ಲ ಎಂದು ಕುಟುಕಿದ ಕಟೀಲ್, ಬಿಜೆಪಿ ಕಡಿಮೆ ಸಮಯ ಅಧಿಕಾರ ನಡೆಸಿದೆ. ಮುಸ್ಲಿಂ ಅಬ್ದುಲ್ ಕಲಾಂರನ್ನು ನಾವು ರಾಷ್ಟ್ರಪತಿ ಮಾಡಿದ್ದೇವೆ. ದಲಿತರಾದ ರಾಮನಾಥ ಕೋವಿಂದ್ ರನ್ನು ರಾಷ್ಟ್ರಪತಿ ಮಾಡಿದ್ದೇವೆ. ಕೇಳದೆ ಇದ್ದರೂ ಗೋವಿಂದ ಕಾರಜೋಳರನ್ನು ಡಿಸಿಎಂ ಮಾಡಿದ್ದೇವೆ. ಆನೇಕಲ್ ವಿಧಾನಸಭೆಯಲ್ಲಿ ಸೋತ ಎ.ನಾರಾಯಣಸ್ವಾಮಿ ಅವರನ್ನು ಚಿತ್ರದುರ್ಗದಲ್ಲಿ ಸಂಸದರನ್ನಾಗಿ ಮಾಡಿ ಕೇಂದ್ರ ಮಂತ್ರಿ ಮಾಡಿದ್ದೇವೆ ಎಂದು ಸಿದ್ದರಾಮಯ್ಯಗೆ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.









