ಲಾಕ್ ಡೌನ್ ಬಗ್ಗೆ ಡಾ.ಕೆ.ಸುಧಾಕರ್ ಸ್ಪಷ್ಟನೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಸರ್ಕಾರ ಸರ್ಕಸ್ ಮುಂದುವರೆಸಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ.
ನಿನ್ನೆ ರಾಜ್ಯದಲ್ಲಿ 34 ಸಾವಿರ ಕೇಸ್ ಗಳು ಪತ್ತೆಯಾಗಿದ್ದು, ಬೆಂಗಳೂರಲ್ಲಿ 20 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ದಿನದಿಂದ ದಿನಕ್ಕೆ ಸೋಂಕಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ.
ಈ ಹಿನ್ನೆಲೆ ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ ಎಂಬ ಮಾತುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಆರೋಗ್ಯ ಸಚಿವ ಪ್ರತಿಕ್ರಿಯಿಸಿದ್ದು, ಕಠಿಣ ನಿರ್ಧಾರ ಅತ್ಯವಶ್ಯಕ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಸಭೆಯಲ್ಲಿ ಇಂದು ಗಂಭೀರ ಚರ್ಚೆ ನಡೆಯಲಿದೆ. ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದೆ.
ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಲಾಕ್ ಡೌನ್ ವಿಚಾರ ಸರ್ಕಾರದ ಗಮನದಲ್ಲಿದೆ.
ಇಂದು ಸಾಧಕ ಬಾಧಕ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು. ನಾವು ರಾಜಕೀಯ ಹಿನ್ನೆಲೆಯಲ್ಲಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ, ನಮ್ಮ ಸರ್ಕಾರ ವೈಜ್ಞಾನಿಕವಾಗಿ ನಿರ್ಧಾರ ತಗೊಳ್ಳುತ್ತದೆ ಎಂದು ಹೇಳುವ ಮೂಲಕ ಲಾಕ್ ಡೌನ್ ಸುಳಿವು ನೀಡಿದ್ದಾರೆ.
ಇನ್ನು ನಾವು ಸದ್ಯ ಎರಡನೇ ಅಲೆಯಲ್ಲಿದ್ದೇವೆ, ಬೇರೆ ದೇಶಗಳು ಮೂರು, ನಾಲ್ಕನೇ ಅಲೆಯಲ್ಲಿದ್ದಾರೆ.
ಒಂದು ಅಲೆ 60-90 ದಿನಗಳ ಕಾಲ ಇರುತ್ತದೆ. ನಮ್ಮ ದೇಶದಲ್ಲಿ ಎರಡನೇ ಅಲೆ ಇನ್ನೂ 30-40 ದಿನ ಇರುತ್ತೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದಾರೆ. ಇಷ್ಟು ದಿನ ಜನ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.