ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ : ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ : ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಈ ರೀತಿ ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ನಡೆದ ದುರಂತದ ಬಗ್ಗೆ ಕಾಂಗ್ರೆಸ್ ನಾಯಕರ ಅಭಿಪ್ರಾಯಗಳ ಬಗ್ಗೆ ಸರಣಿ ಟ್ವೀಟ್ ಗಳ ಮೂಲಕ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಈ ರೀತಿ ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ.
ನಿಯಮ ಬಾಹಿರವಾಗಿ ಜಿಲೆಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ್ದ ಸಂದರ್ಭದಲ್ಲಿ ಅದನ್ನು ಬೇರೆಡೆ ಸಾಗಿಸುವಾಗ ಈ ದುರಂತ ಸಂಭವಿಸಿದೆ.
ಅಕ್ರಮ ಗಣಿಗಾರಿಕೆ ಅಥವಾ ಇನ್ಯಾವುದೇ ರೀತಿಯ ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳಿಗೆ ನಾನು ಎಂದಿಗೂ ಬೆಂಬಲ ನೀಡಿಲ್ಲ ಮತ್ತು ಮುಂದೆಯೂ ನೀಡುವುದಿಲ್ಲ.
ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ದೊರಕಿಸುವುದು ನನ್ನ ಕರ್ತವ್ಯವಾಗಿದ್ದು ಆದಷ್ಟು ಬೇಗ ಈ ಕೆಲಸ ಮಾಡಲಿದ್ದೇನೆ.
ಸಾವಿನ ಮನೆಯಲ್ಲೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮತ್ತು ಇನ್ನೊಬ್ಬರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ನಾಚಿಕೆಯಾಗಬೇಕು.
ಈ ಘಟನೆಯ ಹಿಂದೆ ಯಾರೇ ಇರಲಿ ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
