ಸಿಎಂ ಬೊಮ್ಮಾಯಿ ಮತ್ತು ಸಚಿವ ಈಶ್ವರಪ್ಪ ನಿವಾಸಕ್ಕೆ ಹೆಚ್ಚುವರಿ ಪೊಲೀಸ್ ಭದ್ರತೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್ ಈಶ್ವರಪ್ಪ ಮನೆ ಮುಂದೆ ಇಂದು ಹೆಚ್ಚುವರಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ನಿಂದ ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿ, ಸಚಿವ ಕೆ. ಎಸ್ ಈಶ್ವರಪ್ಪ ಅವರ ಖಾಸಗಿ ನಿವಾಸ, ಸರ್ಕಾರಿ ನಿವಾಸ ಮತ್ತು ಗೃಹ ಕಚೇರಿಗೆ ಹೆಚ್ಚುವರಿ ಪೊಲೀಸ್ ಭದ್ರತೆ ನೀಡಲಾಗದಿದೆ.
ಕಾಲ್ನಡಿಗೆ ಮೂಲಕ ಸಿಎಂ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ಆರ್.ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಖಾಸಗಿ ನಿವಾಸಕ್ಕೆ ಹೆಚ್ಚುವರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಮುಖ್ಯ ರಸ್ತೆಯಿಂದ ಆರ್.ಟಿ ನಗರ ರಸ್ತೆ ಪ್ರವೇಶಿಸುವ ಮಾರ್ಗದಲ್ಲೇ ಬ್ಯಾರಿಕೇಡ್ ಹಾಕಲಾಗಿದ್ದು, ಪ್ರತಿಭಟನೆ, ಮುತ್ತಿಗೆಯಂತಹ ಚಟುವಟಿಕೆ ನಿರ್ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ.
ಅಲ್ಲದೇ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸ ರೇಸ್ ವ್ಯೂ ಕಾಟೇಜಿಗೂ ಹೆಚ್ಚುವರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಕುಮಾರಪಾರ್ಕ್ನಲ್ಲಿರುವ ಸಿಎಂ ಗೃಹ ಕಚೇರಿ ಕೃಷ್ಣಾಗೂ ಭದ್ರತೆ ಹೆಚ್ಚಿಸಲಾಗಿದ್ದು, ಮುತ್ತಿಗೆ, ಪ್ರತಿಭಟನೆಯಂತಹ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿದೆ.
ಮತ್ತೊಂದೆಡೆ ಚಕ್ರವರ್ತಿ ಲೇಔಟ್ನಲ್ಲಿರುವ ಸಚಿವ ಈಶ್ವರಪ್ಪ ಖಾಸಗಿ ನಿವಾಸ ಮತ್ತು ಕುಮಾರಪಾರ್ಕ್ನಲ್ಲಿರುವ ಸರ್ಕಾರಿ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.