ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆಯಲಾಗಿದೆ ಎಂದು ಆರೋಪಿಸಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿ ವಿಷಯ ಹಂಚಿಕೊಂಡಿರುವ ಬಿ.ವೈ ವಿಜಯೇಂದ್ರ, ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಕಾನೂನು ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಮಟ್ಟದ ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.
ಇದೇ ವೇಳೆ, ಸಮಾಜಕ್ಕೆ ಮಾರಕವಾದ, ಯುವಜನತೆ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಮಾದಕ ವ್ಯಸನದ ಕರಿನೆರಳು ಕನ್ನಡ ಚಿತ್ರರಂಗಕ್ಕೂ ಆವರಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿರುವುದು ದುರ್ದೈವದ ಸಂಗತಿ. ಈ ಹೆಮ್ಮಾರಿ ಡ್ರಗ್ ಪಿಡುಗು ವಿದ್ಯಾಸಂಸ್ಥೆಗಳಿಗೂ ತನ್ನ ಕೆನ್ನಾಲಿಗೆ ಚಾಚಿ ನಿಂತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದಿದ್ದಾರೆ.