ಕಾರವಾರ: ಕಳೆದ 15 ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗಳ ಪ್ರಕರಣ ಹೆಚ್ಚಾಗಿದ್ದು, ಆತಂಕ ಮನೆ ಮಾಡುತ್ತಿದೆ.
ಕಳೆದ 15 ದಿನಗಳಲ್ಲಿ 31 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 12 ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಇನ್ನುಳಿದವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಗಂಭೀರ ಪ್ರಕರಣ ವರದಿಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಮಂಗಗಳ ಮೇಲೆ ಸಾಮಾನ್ಯವಾಗಿ ಬದುಕುಳಿಯುವ ಉಣ್ಣಿಗಳ ಕಡಿತದಿಂದ ಈ ಮಂಗನ ಕಾಯಿಲೆ ಹರಡುತ್ತದೆ. ಅಧಿಕಾರಿಗಳು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಈ ರೋಗ ಬಂದರೆ ಮೂರರಿಂದ ಐದು ದಿನಗಳ ಕಾಲ ತೀವ್ರ ಜ್ವರ, ತೀವ್ರ ಮೈಕೈ ನೋವು, ತಲೆನೋವು, ಕಣ್ಣು ಕೆಂಪಾಗುವುದು, ನೆಗಡಿ ಹಾಗೂ ಕೆಮ್ಮು ಕಾಣಿಸುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.