ಮಂಗಳೂರು: ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮಂಗಳೂರು ಸೆಂಟ್ರಲ್ ಜೈಲಿನಲ್ಲಿ ಎರಡು ಗುಂಪುಗಳ ನಡುವೆ ಮರಾಮಾರಿ ನಡೆದಿದೆ. ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜೈಲಿನಿಂದ ಆಸ್ಪತ್ರಗೆ ದಾಖಲಿಸಲಾಗಿದೆ. ಉಳ್ಳಾಲದ ಮೊಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಮತ್ತು ಬೋಳಿಯಾರ್ ನಿವಾಸಿ ಮೊಹಮ್ಮದ್ ಮನ್ಸೂರ್(30) ಗಾಯಗೊಂಡಿರುವ ಕೈದಿಗಳು.
ಇಬ್ಬರನ್ನೂ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಜೈಲು ಅಧಿಕಾರಿಗಳು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಭಾನುವಾರ ಬೆಳಿಗ್ಗೆ ಜೈಲಿನ ಎ ಬ್ಯಾರಕ್ ನ ಅಡುಗೆ ಮನೆಯಲ್ಲಿದ್ದ ಕೆಲವು ಹರಿತವಾದ ವಸ್ತುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ರೌಡಿಶೀಟರ್ ಟೋಪಿ ನೌಫಲ್ ಮತ್ತು ಗ್ಯಾಂಗ್ ವಿರುದ್ಧ ದಾಳಿ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಹಲ್ಲೆ ಮಾಡಿದ ತಂಡದ ಸೆಲ್ ಗಳನ್ನು ಪರಿಶೀಲಿಸಲಾಗಿದೆ. ಮುಫದ್ ರಿಫಾತ್(28), ಮೊಹಮ್ಮದ್ ರಿಜ್ವಾನ್(34), ಇಬ್ರಾಹಿಂ ಕಲ್ಲೆಲ್(30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್, ಜೈನುದ್ದೀನ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಗೊಳಗಾದವರ ವಿರುದ್ಧ ಹಲವು ಪ್ರಕರಣ ದಾಖಲಾಗಿವೆ.