ಬೆಂಗಳೂರು: ಬಿಜೆಪಿಯ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸ್ವಂತ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ (BJP) ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದ್ದಾರೆ. ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ್ದ ನನಗೆ, ಸದ್ಯದ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಅನಿಸದೇ ಹೋದುದು ದುರ್ದೈವ! ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ ನಾಯಕರು ಮಾತಾಡಲೇ ಇಲ್ಲ ಎಂದು ಟೀಕೆ ಮಾಡಿದ್ದಾರೆ.
ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ ಮತ್ತು ತಾಳ-ಮೇಳ ಇಲ್ಲದೇ ಹೋದದ್ದು ವಿಷಾದನೀಯ. ಇದರ ಸಂಪೂರ್ಣ ಲಾಭವನ್ನು ಆಡಳಿತ ಪಕ್ಷ ಪಡೆಯಲು ಸಹಾಯಕವಾಯಿತು. ಸಿಕ್ಕ ಅವಕಾಶ ಮತ್ತು ಸಮಯವನ್ನು ಸದನದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳದೇ, ಇಡೀ ಅಧಿವೇಶನದಲ್ಲಿ ವೃಥಾ ಕಾಲಹರಣ ಮಾಡಿ, ಇನ್ನೂ ಒಂದು ದಿನ ಬಾಕಿ ಇರುವಾಗಲೇ ಸದನದ ಕಲಾಪಗಳನ್ನು ಮೊಟಕುಗೊಳಿಸುವಲ್ಲಿ ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ ಎಂದು ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.








