ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಉಚ್ಛಾಟಿಸಿದೆ.
ಈಶ್ವರಪ್ಪ ಅವರು ಮಗನಿಗೆ ಹಾವೇರಿ ಟಿಕೆಟ್ ಕೇಳಿದ್ದರು. ಆದರೆ, ಬಿಜೆಪಿಯು ಟಿಕೆಟ್ ನೀಡದೆ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಟಿಕೆಟ್ ನೀಡಿತ್ತು. ಇದರಿಂದಾಗಿ ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದರು. ಅಪ್ಪ-ಮಕ್ಕಳನ್ನು ಸೋಲಿಸುತ್ತೇನೆ ಎಂದು ಪಟ್ಟು ಹಿಡಿದಿದ್ದರು. ಹೀಗಾಗಿಯೇ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು.
ಬಂಡಾಯವೆದ್ದ ಹಿನ್ನೆಲೆಯಲ್ಲಿ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಹೀಗಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶದಲ್ಲಿ ಹೇಳಿದ್ದಾರೆ.
ನಾಮಪತ್ರ ಹಿಂದಕ್ಕೆ ಪಡೆಯುವಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರ ಮನವೊಲಿಸುವ ಪ್ರಯತ್ನ ನಡೆಸಲಾಗಿತ್ತು. ಆದರೆ, ಕಣದಿಂದ ಹಿಂದಕ್ಕೆ ಸರಿಲಿಲ್ಲ. ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿತ್ತು. ನಾಮಪತ್ರ ಹಿಂದಕ್ಕೆ ಪಡೆಯದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.