ಉಡುಪಿ: ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್(Raghupati Bhat)ರನ್ನು ಉಚ್ಛಾಟಿಸಲಾಗಿದೆ.
ನೈಋತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದ ಹಿನ್ನೆಲೆಯಲ್ಲಿ ಪಕ್ಷವು ಉಚ್ಛಾಟಿಸಿದೆ. ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಬಿಜೆಪಿ ಸೂಚಿಸಿತ್ತು. ಜೊತೆಗೆ ಬಿಜೆಪಿ ಹಿರಿಯ ನಾಯಕರಿಂದಲೂ ಕೂಡ ಮನವರಿಸುವ ಯತ್ನ ನಡೆದಿತ್ತು. ಆದರೆ, ನಾಮಪತ್ರ ಹಿಂದೆ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಉಚ್ಚಾಟನೆ ಮಾಡಲಾಗಿದೆ.
ವಿಧಾನ ಪರಿಷತ್ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಸೇರಿದಂತೆ 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್ ಸ್ಪರ್ಧೆಗಿಳಿದಿದ್ದರು. ಇತ್ತ ಹಾಲಿ ಶಾಸಕ ಯಶ್ಪಾಲ್ ಸುವರ್ಣ ಬೆಂಬಲಿಗರು ಹಾಗೂ ರಘುಪತಿ ಭಟ್ ಅವರ ನಡುವೆ ವಾಕ್ಸಮರ ನಡೆದಿದೆ.
ರಘುಪತಿ ಭಟ್ ಟಿಕೆಟ್ ತಪ್ಪಿಸಿದ್ದು ಯಶ್ ಪಾಲ್ ಸುವರ್ಣ, ಜೊತೆಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡದಂತೆ ಹೈಕಮಾಂಡ್ಗೆ ಮನವಿ ಮಾಡಿದ್ದರು. ಈ ಮೂಲಕ ತನ್ನ ರಾಜಕೀಯ ಗುರುವಿಗೆ ಯಶ್ಪಾಲ್ ಖೆಡ್ಡಾ ತೋಡಿದ್ದಾರೆ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್ಗಳನ್ನು ಹರಿಯಬಿಡಲಾಗಿತ್ತು. ಇದಕ್ಕೆ ಸ್ಪಷ್ಟೀಕರಣ ನೀಡುವಂತೆ ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ರಘುಪತಿ ಭಟ್ಗೆ ನೋಟಿಸ್ ಜಾರಿ ಮಾಡಲಾಗಿತ್ತು. ಇದರ ಬೆನ್ನಲ್ಲಿಯೇ ರಘುಪತಿ ಭಟ್ ಬೆಂಬಲಿಗರು ಅಭಿಯಾನ ಆರಂಭಿಸಿದ್ದರು.
ಮಾಜಿ ಶಾಸಕ ರಘುಪತಿ ಭಟ್ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷವು ಈ ಕ್ಷೇತ್ರದಿಂದ ಶಿವಮೊಗ್ಗದ ಡಾ. ಧನಂಜಯ ಸರ್ಜಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿತ್ತು. ಶಿಕ್ಷಕರ ಕ್ಷೇತ್ರದ ಟಿಕೆಟ್ ಅನ್ನು ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿತ್ತು.