ಕೇಂದ್ರ ಕ್ಯಾಬಿನೆಟ್ ನಲ್ಲಿ ರಾಜ್ಯದ ನಾಲ್ವರಿಗೆ ಸ್ಥಾನ
ನವದೆಹಲಿ : ಕೇಂದ್ರ ಕ್ಯಾಬಿನೆಟ್ ನಲ್ಲಿ ರಾಜ್ಯದ ನಾಲ್ವರಿಗೆ ಸ್ಥಾನ ಸಿಗುವುದು ಬಹುತೇಕ ಸ್ಪಷ್ಟವಾಗಿದೆ.
ಈಗಾಗಲೇ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಎ. ನಾರಾಯಣಸ್ವಾಮಿ ಕೇಂದ್ರ ಸಂಪುಟ ಸೇರ್ಪಡೆಯಾಗುವುದು ಖಚಿತವಾಗಿದೆ.
ಈ ನಡುವೆ ಬೀದರ್ ಲೋಕಸಭಾ ಕ್ಷೇತ್ರ ಸಂಸದ ಭಗವಂತ ಖೂಬಾ ಅವರಿಗೂ ದೆಹಲಿಗೆ ಬರುವಂತೆ ಬುಲಾವ್ ಬಂದಿದ್ದು, ಖೂಬಾ ಅವರು ಮೋದಿ ಸಂಪುಟ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಇದಲ್ಲದೇ ಸಂಸದ ರಾಜೀವ್ ಚಂದ್ರಶೇಖರ್ ಅವರಿಗೂ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇತ್ತ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ಸಚಿವ ಹುದ್ದೆಯ ಸಂಭಾವ್ಯರನ್ನ ಭೇಟಿಯಾದರು.
ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು.
ಇಂದು ಸಂಜೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.