ಬೆಂಗಳೂರು : ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗಲಿದೆ. ಈ ಬಗ್ಗೆ ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಭಾರೀ ಹಾಗೂ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸೆ. 16 ಮತ್ತು 17ರಂದು ಹಗುರ ಮಳೆಯಾಗಬಹುದು.
ಇಂದಿನಿಂದ 20ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ವ್ಯಾಪಕ ಮಳೆ ಆಗಲಿದೆ. ಹೀಗಾಗಿ 16 ಮತ್ತು 17ರಂದು ಯಲ್ಲೋ ಅಲರ್ಟ್, 18ರಿಂದ 20ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಸೆ. 16ರಿಂದ 20ರವರೆಗೆ ವ್ಯಾಪಕ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 16ರಿಂದ 20ರವರೆಗೆ ಭಾರಿ ವರ್ಷಧಾರೆ ಆಗಲಿದೆ. ಈ ಹಿನ್ನೆಲೆ ಸೆಪ್ಟೆಂಬರ್ 18ರಂದು ಯಲ್ಲೋ ಅಲರ್ಟ್ ಹಾಗೂ ಸೆ. 19 ಮತ್ತು 20ರಂದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.