ಮಂಡ್ಯ: ಗ್ಯಾರಂಟಿಯಿಂದಾಗಿ ಅಭಿವೃದ್ಧಿಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ಶಾಸಕ ದರ್ಶನ್ ಪುಟ್ಟಣಯ್ಯ ಆರೋಪಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವ ಊರಿಗೆ ಹೋದರೂ ಜನರು ರಸ್ತೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ನಮಗೆ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ (Guarantee Scheme) ಇತರೆ ಅಭಿವೃದ್ಧಿ ಕೆಲಸಗಳಿಗೆ ಅನುದಾನಗಳು ಬರುತ್ತಿಲ್ಲ. ಹೀಗಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಪರಾಮರ್ಶೆ ಮಾಡಿ ಅಭಿವೃದ್ಧಿ ಯೋಜನೆಗಳಿಗೂ ಹಣ ಮೀಸಲಿಡಬೇಕು. ಜನರು ಒಂದು ವರ್ಷದಿಂದ ನೀವು ಏನೂ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ನಾವು ಜನರಿಂದ ಛೀಮಾರಿ ಹಾಕಿಸಿಕೊಳ್ಳುವಂತಾಗಿದೆ. ಹೀಗಾಗಿ ಅಭಿವೃದ್ಧಿಗೆ ಹಣ ಅವಶ್ಯಕತೆ ಇದೆ. ಸದ್ಯ ರಾಜ್ಯದ ಎಲ್ಲಾ ಆದಾಯದ ಮೂಲ ಗ್ಯಾರಂಟಿ ಯೋಜನೆಗಳಿವೆ ಹೋಗುತ್ತಿದೆ. ಹೀಗಾಗಿ ಸಮತೋಲನವಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಕ್ಕೆ ಅನುದಾನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಜನರಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದು ಸಹ ಅನಿವಾರ್ಯವಾಗಿದೆ. ಹೀಗಾಗಿ ಸರ್ಕಾರವು ತನ್ನ ಗ್ಯಾರಂಟಿ ಯೋಜನೆಗಳ ಕುರಿತು ಪರಾಮರ್ಶೆ ನಡೆಸಬೇಕಿದೆ.








