ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಗೂಬೆ ಕೂರಿಸುವ ಬದಲು ಎಲ್ ಪಿ ಜಿ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ 6ನೇ ಗ್ಯಾರಂಟಿ ರೂಪದಲ್ಲಿ ಆರ್ಥಿಕ ನೆರವು ನೀಡಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಿಂಧನೂರಿಗೆ ತೆರಳುವ ಮಾರ್ಗಮಧ್ಯೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕಾರ್ಯವೈಖರಿ ಮತ್ತು ಕಾಂಗ್ರೆಸ್ ನಾಯಕರ ರಾಜಕೀಯ ತಂತ್ರಗಾರಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಜಾಗತಿಕ ಯುದ್ಧದ ಬಿಕ್ಕಟ್ಟಿನಿಂದಾಗಿ ಎದುರಾಗಿರುವ ಸಮಸ್ಯೆಗಳನ್ನು ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಕವಿದಿದೆ. ಈ ಜಾಗತಿಕ ಬಿಕ್ಕಟ್ಟಿನಿಂದಾಗಿ ಎಲ್ ಪಿ ಜಿ ಪೂರೈಕೆ ಸೇರಿದಂತೆ ಹಲವು ಆರ್ಥಿಕ ಸವಾಲುಗಳು ಎದುರಾಗಿವೆ. ಇಷ್ಟೆಲ್ಲಾ ಪ್ರತಿಕೂಲ ಪರಿಸ್ಥಿತಿಗಳಿದ್ದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ದೇಶದಲ್ಲಿ ಜನಸಾಮಾನ್ಯರಿಗೆ ದೊಡ್ಡಮಟ್ಟದ ಹೊರೆಯಾಗದಂತೆ ಪರಿಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳುವ ಸೌಜನ್ಯ ರಾಜ್ಯ ಸರ್ಕಾರಕ್ಕಿಲ್ಲ ಎಂದು ಅವರು ತಿರುಗೇಟು ನೀಡಿದರು.
ತೆರಿಗೆ ಹಾಕಿ ಗಾಯದ ಮೇಲೆ ಬರೆ ಎಳೆದ ಸರ್ಕಾರ
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆಯಿಂದಾಗಿ ಪ್ರತಿದಿನ ದುಡಿದು ತಿನ್ನುವ ಆಟೋ ಚಾಲಕರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಅವರ ಕೈಹಿಡಿಯಬೇಕಾದ ರಾಜ್ಯ ಸರ್ಕಾರ, ಅದರ ಬದಲು ಹೆಚ್ಚುವರಿ ತೆರಿಗೆಗಳನ್ನು ವಿಧಿಸುವ ಮೂಲಕ ಚಾಲಕರ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ಆಟೋ ಚಾಲಕರ ಬದುಕು ದುಸ್ತರವಾಗಿದ್ದರೂ ರಾಜ್ಯ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಕಿಡಿಕಾರಿದರು.
ತಿಂಗಳಿಗೆ 15 ಸಾವಿರ ರೂಪಾಯಿ ಪರಿಹಾರ ನೀಡಿ
ರಾಜ್ಯದಲ್ಲಿ ಈಗಾಗಲೇ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಸದಾ ಬೆನ್ನು ತಟ್ಟಿಕೊಳ್ಳುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಆಟೋ ಚಾಲಕರ ಕಣ್ಣೀರು ಏಕೆ ಕಾಣುತ್ತಿಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಗ್ಯಾಸ್ ಸಮಸ್ಯೆಯಿಂದ ಆಟೋ ಚಾಲಕರು ತಮ್ಮ ಜೀವನ ನಿರ್ವಹಣೆಗಾಗಿ ಪರದಾಡುತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು, ಸಂಕಷ್ಟದಲ್ಲಿರುವ ಎಲ್ಲಾ ಆಟೋ ಚಾಲಕರಿಗೆ ಪ್ರತಿ ತಿಂಗಳು 15 ಸಾವಿರ ರೂಪಾಯಿಗಳ ಪರಿಹಾರವನ್ನು ಆರನೇ ಗ್ಯಾರಂಟಿಯಾಗಿ ಘೋಷಣೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕಾಂಗ್ರೆಸ್
ಜಾಗತಿಕ ಮಟ್ಟದ ಯುದ್ಧದ ಸ್ಥಿತಿಯಿಂದಾಗಿ ಎದುರಾಗಿರುವ ಅನಿವಾರ್ಯ ಸಮಸ್ಯೆಯನ್ನೇ ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಜನರ ನೈಜ ಸಂಕಷ್ಟಗಳಿಗೆ ಸ್ಪಂದಿಸುವ ಯಾವುದೇ ಇಚ್ಛಾಶಕ್ತಿ ಈ ಸರ್ಕಾರಕ್ಕಿಲ್ಲ. ಕೇವಲ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಇವರ ದಿನನಿತ್ಯದ ಕಾಯಕವಾಗಿದೆ. ಇನ್ನಾದರೂ ಈ ಅಗ್ಗದ ರಾಜಕೀಯವನ್ನು ಕೈಬಿಟ್ಟು ತಕ್ಷಣವೇ ಆಟೋ ಚಾಲಕರ ನೆರವಿಗೆ ಧಾವಿಸಿ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.







