ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಯೋಧ ಹುತಾತ್ಮರಾಗಿರುವ ಘಟನೆ ನಡೆದಿದೆ.
ಅಲ್ಲದೇ, ಘಟನೆಯಲ್ಲಿ ಮತ್ತೊಬ್ಬ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಡಿ ನಿಯಂತ್ರಣ ರೇಖೆಯ ಬಳಿಯ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ವಿರುದ್ಧ ಕಾರ್ಯಾಚರಣೆ ನಡೆದ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಕುಪ್ವಾರದ ಕೋವುಟ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಕುರಿತು ಖಚಿತ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸೇನೆಯು ಜಮ್ಮು-ಕಾಶ್ಮೀರದ ಪೊಲೀಸರೊಂದಿಗೆ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು.
ಭಾರತೀಯ ಸೇನೆಯ ಕಾರ್ಯಾಚರಣೆ ಸಂದರ್ಭದಲ್ಲಿ ಉಗ್ರರು ಸಹ ಗುಂಡಿನ ಚಕಮಕಿ ನಡೆಸಿದರು. ಈ ಸಂದರ್ಭದಲ್ಲಿ ಸೈನಿಕ ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆ ಹೇಳಿದೆ.
ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ನಂತರ ಹುತಾತ್ಮರಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಸೇನೆಗೆ ಹಸ್ತಾಂತರಿಸಲಾಗಿದೆ.








