ಬೆಂಗಳೂರು: ಮಹಾಮಾರಿ ಕೊರೊನಾ ರಾಜ್ಯದ ಮತ್ತೊಬ್ಬ ಜನಪ್ರತಿನಿಧಿಯನ್ನು ಬಲಿ ಪಡೆದಿದೆ. 2018ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ದ ಬೀದರ್ ಜಿಲ್ಲೆ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್(65) ಕೊರೊನಾಗೆ ಬಲಿಯಾಗಿದ್ದಾರೆ.
ನಿನ್ನೆಯಷ್ಟೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಗಿದ್ದಾರೆ. ಅದಾದ ಒಂದು ದಿನದೊಳಗೆ ಶಾಸಕ ಬಿ.ನಾರಾಯಣರಾವ್ ಬಲಿಯಾಗಿರುವುದು ಆತಂಕ ಹೆಚ್ಚಿಸಿದೆ.
ನಾರಾಯಣರಾವ್ ಅವರಿಗೆ ಆಗಸ್ಟ್ 31ರಂದು ಆರೋಗ್ಯದಲ್ಲಿ ಏರುಪೇರು ಆದ ಕಾರಣ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸೆ.1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಕೊರೊನಾ ಜೊತೆಗೆ ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ನಾರಾಯಣರಾವ್, ಆಸ್ಪತ್ರೆಗೆ ದಾಖಲಾದ ಎರಡೇ ದಿನದಲ್ಲಿ ಸ್ವಲ್ಪ ಚೇತರಿಸಿಕೊಂಡಿದ್ದರು. ಮುಖಂಡರು ಹಾಗೂ ಆಪ್ತರಿಗೆ ತಾವೇ ಕರೆ ಮಾಡಿ ನನ್ನ ಆರೋಗ್ಯ ಸುಧಾರಿಸಿದೆ ಎಂದು ಹೇಳಿಕೊಂಡಿದ್ದರು.
ಇದಾದ ಕೆಲವೇ ದಿನಗಳಲ್ಲಿ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿತ್ತು. ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ಪರಿಣಾಮ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಾಮಾಲೆ, ಬಿಪಿ ಇನ್ನಷ್ಟು ಬಿಗಡಾಯಿಸಿದ ಪರಿಣಾಮ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಉಸಿರಾಟದ ಸಮಸ್ಯೆ ಹೆಚ್ಚಾಗಿ ನ್ಯುಮೋನಿಯಾಗೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 3.55ಕ್ಕೆ ಬಿ.ನಾರಾಯಣರಾವ್ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ನಾರಾಯಣರಾವ್, 2018ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಬಿಜೆಪಿಯ ಮಲ್ಲಿಕಾರ್ಜುನ ಖುಬಾ ಅವರನ್ನು ಸೋಲಿಸಿ ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಬಾವುಟ ಹಾರಿಸಿದ್ದರು.
ಬೀದರ್ ಸಮೀಪದ ಬಸವಂತಪುರದಲ್ಲಿ ಜನಿಸಿದ್ದ ನಾರಾಯಣರಾವ್, ಬಿ.ಎ ಪದವೀಧರರು. ಉತ್ತಮ ವಾಕ್ ಚಾತುರ್ಯ ಹೊಂದಿದ್ದ ರಾವ್, ತಮ್ಮ ಖಡಕ್ ಮಾತುಗಳಿಗೆ ಫೇಮಸ್ ಅಗಿದ್ದರು. 1987ರಲ್ಲಿ ಮಾಳೆಗಾಂವ್ ಜಿಲ್ಲಾ ಪಂಚಾಯತ್ತಿ ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದರು. 1989ರ ವಿಧಾನಸಭೆ ಚುನಾವಣೆಯಲ್ಲಿ ಬಸವಕಲ್ಯಾಣದಿಂದ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಸೋಲು ಅನುಭವಿಸಿದ್ದರು. ಹೀಗಾಗಿ 90 ರ ದಶಕದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿ ಎಸ್.ಎಂ ಕೃಷ್ಣ ಸರ್ಕಾರದಲ್ಲಿ ರಾಜ್ಯ ಸಾಕ್ಷರತಾ ಮಿಷನ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಬಸವಕಲ್ಯಾಣದಿಂದ ಕಾಂಗ್ರೆಸ್ ಟಿಕೆಟ್ಗಾಗಿ ಸತತ ಪ್ರಯತ್ನ ನಡೆಸಿದ್ದರೂ ಸಿಕ್ಕಿರಲಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರಿಂದ 2018ರಲ್ಲಿ ಬಸವ ಕಲ್ಯಾಣದಿಂದ ಕಾಂಗ್ರೆಸ್ ಟಿಕೆಟ್ ಸಿಕ್ಕಿತ್ತು.
ಮಾಜಿ ಸಿಎಂ ಕುಮಾರಸ್ವಾಮಿ ನಾಡದ್ರೋಹಿ; ಡಿ.ಕೆ. ಶಿವಕುಮಾರ್
ಬೆಂಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆಶಿ ಗುಡುಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ಕುಮಾರಸ್ವಾಮಿ ನಾಡದ್ರೋಹಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಈಗ...