ಕೇಂದ್ರ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ಸಚಿವ ಡಾ. ಸುಧಾಕರ್
ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲೇ ಇರುವ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕೈಗಾರಿಕಾ ಹಬ್ ಆಗಿ ಬೆಳೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ಡಾ.ಕೆ.ಸುಧಾಕರ್, ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ನಗರ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರದಲ್ಲಿರುವ ಈ ಜಿಲ್ಲೆ, ಹೆಚ್ಚು ಕೈಗಾರಿಕಾಭಿವೃದ್ಧಿಯನ್ನು ಕಂಡಿಲ್ಲ. ಈ ಜಿಲ್ಲೆ ಎರಡು ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಬಂದರು ನಗರಗಳಾದ ಚೆನ್ನೈ ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುತ್ತದೆ. ಜಿಲ್ಲೆಯ ಗಡಿಭಾಗಕ್ಕೆ 10 ಕಿ.ಮೀ. ದೂರದಲ್ಲೇ ವಿಮಾನ ನಿಲ್ದಾಣವಿದೆ. ಹಾಗೆಯೇ ರೈಲು ಸಂಪರ್ಕವನ್ನೂ ಹೊಂದಿದೆ. ಉದ್ಯಮಗಳಲ್ಲಿ ದುಡಿಯುವ ಪ್ರತಿಭಾವಂತರು ಚಿಕ್ಕಬಳ್ಳಾಪುರದಲ್ಲಿದ್ದು, ಬೆಂಗಳೂರಿನಲ್ಲಿರುವ ಉದ್ಯಮಗಳಲ್ಲಿ ಕೆಲಸ ಮಾಡಲು ತೆರಳುತ್ತಿದ್ದಾರೆ. ಭೂಮಿ, ಎತ್ತಿನಹೊಳೆ ಮೂಲಕ ಸಿಗುವ ನೀರು ಮೊದಲಾದ ನೈಸರ್ಗಿಕ ಸಂಪನ್ಮೂಲಗಳನ್ನು ಜಿಲ್ಲೆ ಹೊಂದಿದೆ ಎಂದು ಸಚಿವರು ಪತ್ರದಲ್ಲಿ ವಿವರಿಸಿದ್ದಾರೆ.
ಜಿಲ್ಲೆಯಲ್ಲಿ ಕೈಗಾರಿಕಾ ಹಬ್ ನಿರ್ಮಾಣದಿಂದ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗಲಿದೆ. ಜೊತೆಗೆ ಮಾಲಿನ್ಯ, ಸಂಚಾರ ದಟ್ಟಣೆಯೂ ಕಡಿಮೆಯಾಗಲಿದೆ. ಆದ್ದರಿಂದ ಈ ಭಾಗದಲ್ಲಿ ಕೈಗಾರಿಕಾ ಹಬ್ ಆರಂಭಿಸಬೇಕೆಂದು ಸಚಿವರು ಕೋರಿದ್ದಾರೆ.