ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನದ ಸಂಪೂರ್ಣ ಅಪ್ಡೇಟ್ ಇಲ್ಲಿದೆ….
ಸಾಮಾನ್ಯ ಬುಡಕಟ್ಟು ಜನಾಂಗದ ಮಹಿಳೆ ಭಾರತದ ಪ್ರಜಾಪ್ರಭುತ್ವದ ಅಡಿಯಲ್ಲಿ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನ ಅಲಂಕರಿಸಬಹುದು ಎನ್ನುವುದಕ್ಕೆ ಭಾರತ ದೇಶ ಇಂದು ಸಾಕ್ಷಿಯಾಗಿದೆ.
ಒಡಿಶಾ ಮೂಲದ ಆದಿವಾಸಿ ಮಹಿಳೆ ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದ್ರೌಪದಿ ಮುರ್ಮು ಇಂದು ಬೆಳಗ್ಗೆ 10.15ಕ್ಕೆ ಸಂಸತ್ ಭವನದ ಸೆಂಟ್ರಲ್ ಹಾಲ್ ತಲುಪಿ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದಕ್ಕೂ ಮುನ್ನ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನ ತಲುಪಿ, ಅಲ್ಲಿ ರಾಮ್ ನಾಥ್ ಕೋವಿಂದ್ ಮತ್ತು ಅವರ ಪತ್ನಿಯನ್ನು ಭೇಟಿಗಿದ್ದರು. ರಾಷ್ಟ್ರಪತಿ ಭವನಕ್ಕೆ ತೆರಳುವ ಮುನ್ನ ಅವರು ರಾಜ್ ಘಾಟ್ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದ್ದರು.
ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವತಂತ್ರ ಭಾರತದಲ್ಲಿ ಜನಿಸಿದ ದೇಶದ ಮೊದಲ ರಾಷ್ಟ್ರಪತಿ ನಾನು. ಸ್ವತಂತ್ರ ಭಾರತದ ಬಗ್ಗೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹೊಂದಿದ್ದ ನಿರೀಕ್ಷೆಗಳನ್ನು ಪೂರೈಸಲು ನಾವು ಇನ್ನಷ್ಟು ಪ್ರಯತ್ನಗಳನ್ನ ಪಡಬೇಕಿದೆ.
“ನಾನು ಬಂದ ಸ್ಥಳ, ಪ್ರಾಥಮಿಕ ಶಿಕ್ಷಣ ಒಂದು ಕನಸು. ದೇಶದ ವಂಚಿತರು, ಬಡವರು, ದಲಿತರು ಮತ್ತು ಬುಡಕಟ್ಟು ಜನರ ಪ್ರತಿಬಿಂಬವವಾಗಿ ನಾನಿಲ್ಲಿ ನಿಂತಿದ್ದೇನೆ. ನಾನು ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿದ್ದರ ಹಿಂದೆ ಬಡವರ ಆಶೀರ್ವಾದವಿದೆ. ಕೋಟಿಗಟ್ಟಲೆ ಮಹಿಳೆಯರ ಕನಸುಗಳು ಮತ್ತು ಸಾಮರ್ಥ್ಯಗಳ ಪ್ರತಿಬಿಂಬವಾಗಿ ನಾನು ಈ ಹುದ್ದೆಗೆ ಏರಿದ್ದೇನೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಹುದ್ದೆ ತಲುಪಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ನನ್ನ ನಾಮನಿರ್ದೇಶನವು ಭಾರತದಲ್ಲಿನ ಬಡವರು ಕನಸುಗಳನ್ನು ಮಾತ್ರವಲ್ಲದೆ ಆ ಕನಸುಗಳನ್ನು ನನಸಾಗಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ.
ಸಂಸತ್ತಿನಲ್ಲಿ ನನ್ನ ಉಪಸ್ಥಿತಿಯು ಭಾರತೀಯರ ಭರವಸೆ ಮತ್ತು ಹಕ್ಕುಗಳ ಸಂಕೇತವಾಗಿದೆ. ಎಲ್ಲರಿಗೂ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಹೊಸ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಶಕ್ತಿಯನ್ನು ನೀಡುತ್ತಿದೆ ಎಂದು ಭಾಷಣದಲ್ಲಿ ತಿಳಿಸಿದರು.
ಪ್ರಮಾಣ ವಚನ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಮಂತ್ರಿಮಂಡಲದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳು, ಸಂಸತ್ತಿನ ಸದಸ್ಯರು ಮತ್ತು ಭಾರತ ಸರ್ಕಾರದ ಪ್ರಧಾನ ಸಿವಿಲ್ ಮತ್ತು ಮಿಲಿಟರಿ ಅಧಿಕಾರಿಗಳು ಭಾಗವಹಿಸಿದ್ದರು.
ಮುರ್ಮು ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಒಡಿಶಾದಿಂದ 64 ವಿಶೇಷ ಅತಿಥಿಗಳು ಆಗಮಿಸಿದ್ದರು. ಪ್ರಮಾಣ ವಚನದ ನಂತರ ರಾಷ್ಟ್ರಪತಿ ಭವನದಲ್ಲಿ ಅವರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿತ್ತು.
ಸಮಾರಂಭದ ಮುಕ್ತಾಯದ ನಂತರ, ರಾಷ್ಟ್ರಪತಿ ಮುರ್ಮು ಅವರು ರಾಷ್ಟ್ರಪತಿ ಭವನಕ್ಕೆ ತೆರಳಿದರು, ಅಲ್ಲಿ ಅವರಿಗೆ ಫೋರ್ಕೋರ್ಟ್ನಲ್ಲಿ ಇಂಟರ್-ಸರ್ವಿಸ್ ಗಾರ್ಡ್ ಆಫ್ ಆನರ್ ನೀಡಲಾಯಿತು ಮತ್ತು ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಗೌರವ ಸಲ್ಲಿಸಲಾಯಿತು.
64 ವರ್ಷದ ದ್ರೌಪದಿ ಮುರ್ಮು ಅವರು ದೇಶದ ಅತ್ಯಂತ ಕಿರಿಯ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಸ್ವಾತಂತ್ರ್ಯದ ನಂತರ ಜನಿಸಿದ ಭಾರತದ ಮೊದಲ ರಾಷ್ಟ್ರಪತಿ ಕೂಡ.








