ಮುಂಬಯಿ : ವೆಸ್ಟ್ ಇಂಡೀಸ್ (West Indies) ವಿರುದ್ಧ ಜುಲೈನಲ್ಲಿ ನಡೆಯಲಿರು 2 ಪಂದ್ಯಗಳ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ತಲಾ 16 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ವಿಂಡೀಸ್ ವಿರುದ್ಧ ಟೆಸ್ಟ್ ಪಂದ್ಯಗಳಿಗೆ ಐಪಿಎಲ್ ನ (IPL 2023) ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಸ್ಥಾನ ಗಳಿಸಿಕೊಂಡಿದ್ದಾರೆ. ಇತ್ತೀಚೆಗೆ ವೈಫಲ್ಯ ಅನುಭವಿಸುತ್ತಿರುವ ಚೇತೇಶ್ವರ್ ಪೂಜಾರ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಪಾನಿಪುರಿ ಮಾರಾಟ ಮಾಡುತ್ತಿದ್ದ ಹುಡುಗ ಕೊನೆಗೂ ಸತತ ಶ್ರಮದಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಗಳಿಸುವಲ್ಲಿ ʻಯಶಸ್ವಿʼಯಾಗಿದ್ದಾರೆ.
ಟೀಂ ಇಂಡಿಯಾ ಸೇರಲು ವಿಫಲವಾಗಿದ್ದ ಸಂಜು ಸ್ಯಾಮ್ಸನ್ (Sanju Samson) ವಿಂಡೀಸ್ ವಿರುದ್ಧ ಏಕದಿನ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯುವ ವೇಗಿ ಆಕಾಶ್ ದೀಪ್ ಅವರಿಗೂ ಟೆಸ್ಟ್ ನಲ್ಲಿ ಅವಕಾಶ ನೀಡಲಾಗಿದೆ. ಅಜಿಂಕ್ಯ ರಹಾನೆ ಉಪನಾಯಕನ ಪಟ್ಟ ಪಡೆದುಕೊಂಡಿದ್ದಾರೆ.
ಭಾರತ ತಂಡದಲ್ಲಿ ಚೇತೇಶ್ವರ್ ಪೂಜಾರ ಅವರ ಸ್ಥಾನಕ್ಕೆ ಜೈಸ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಆ ಮೂಲಕ 21ರ ಪ್ರಾಯದ ಯುವ ಆಟಗಾರನಿಗೆ ದೀರ್ಘಾವಧಿ ಅವಕಾಶ ನೀಡಲು ಬಿಸಿಸಿಐ ತೀರ್ಮಾನಿಸಿದೆ. ಋತುರಾಜ್ ಗಾಯಕ್ವಾಡ್, ವಿಕೆಟ್ ಕೀಪರ್-ಬ್ಯಾಟ್ಸ್ಮನ್ಗಳಾಗಿ ಕೆ.ಎಸ್ ಭರತ್ ಹಾಗೂ ಇಶಾನ್ ಕಿಶನ್ ಸ್ಥಾನ ಪಡೆದುಕೊಂಡಿದ್ದಾರೆ. ಜೊತೆಗೆ ರವೀಂದ್ರ ಜಡೇಜಾ, ಆರ್. ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಅವರು ಸ್ಪಿನ್ ಆಲ್ರೌಂಡರ್ಗಳಾಗಿ ಸ್ಥಾನ ಉಳಿಸಿಕೊಂಡಿದ್ದಾರೆ.
ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ (ನಾಯಕ) (Rohit Sharma), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ ಸ್ಥಾನ ಪಡೆದಿದ್ದಾರೆ.
ಏಕದಿನ ತಂಡದಲ್ಲಿ ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್ ಸ್ಥಾನ ಪಡೆದಿದ್ದಾರೆ.








