ಮಡಿಕೇರಿ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದು, ಈ ಬಗ್ಗೆ ಮಾತನಾಡಿರುವ ಶಾಸಕ ಅಪ್ಪಚ್ಚು ರಂಜನ್ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ,
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿ, ನಾನು ಐದು ಬಾರಿ ಶಾಸಕನಾಗಿ ಗೆದ್ದು 23 ವರ್ಷಗಳಿಂದ ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹಾಗಾಗಿ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಪ್ರಸ್ತುತ ಸಚಿವ ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆ ಆಗುವುದೊ ಗೊತ್ತಿಲ್ಲ. ಅದಾದ ಬಳಿಕ ಸಂಪುಟದಲ್ಲಿ ಸ್ಥಾನದ ಬಗ್ಗೆ ಹೇಳಬಲ್ಲೆ. ರಾಜ್ಯ ಸಮಿತಿ ಕೇಂದ್ರಕ್ಕೆ ನೀಡಿರುವ ಹೆಸರುಗಳ ವರದಿಯನ್ನು ನಾನು ನಂಬುವುದಿಲ್ಲ. ರಾಜ್ಯದಲ್ಲಿ ಶಾಸಕ ಎಸ್.ಅಂಗಾರ ಮತ್ತು ನಾನು ಇಬ್ಬರು ಹಿರಿಯರಿದ್ದೇವೆ. ಅರ್ಹರನ್ನು ಕೇಂದ್ರ ಸಮಿತಿ ಶಿಫಾರಸು ಮಾಡುತ್ತಾರೆ ಎನ್ನುವ ನಂಬಿಕೆ ನನಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಸರ್ಕಾರವಿದೆ. ಮುಂದಿನ ದಿನಗಳಲ್ಲಿ ಅವರ ನೇತೃತ್ವದಲ್ಲಿ ಸರ್ಕಾರ ನಡೆಯಬೇಕು ಎನ್ನುವುದು ನಮ್ಮ ಅಭಿಪ್ರಾಯ ಎಂದರು