ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ ಎಂಬ ವಿಶ್ವಾಸದಿಂದ ಜನರು ನನ್ನನ್ನು ಗೆಲ್ಲಿಸಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದಾರೆ.
ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರು ರಾಜಕಾರಣದಲ್ಲಿ ಅಜಾತಶತ್ರುವಾಗಿ ಬೆಳೆದವರು. ಅಜ್ಜನ ಆ ಶಿಸ್ತು, ಪ್ರೀತಿ ಮತ್ತು ಎಲ್ಲರನ್ನೂ ಸಮಾನವಾಗಿ ಕಾಣುವ ಗುಣ ನನಗೂ ಪ್ರೇರಣೆಯಾಗಿದೆ. ಅವರ ಹಾದಿಯಲ್ಲೇ ಸಾಗಿ ನಾನು ಕೂಡ ಅಜಾತಶತ್ರು ಎನಿಸಿಕೊಳ್ಳಬೇಕು ಎಂಬ ದೊಡ್ಡ ಗುರಿಯನ್ನು ಹೊಂದಿದ್ದೇನೆ. ರಾಜಕೀಯ ಏನೇ ಇರಲಿ, ಜನರ ಸೇವೆಯಲ್ಲಿ ಯಾವುದೇ ಭೇದಭಾವ ಮಾಡುವುದಿಲ್ಲ ಎಂದು ಅವರು ಮಾರ್ಮಿಕವಾಗಿ ನುಡಿದರು.
ಕ್ಷೇತ್ರದ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಸದಾ ಸಿದ್ಧನಿರುತ್ತೇನೆ. ನಮ್ಮ ಮನೆಯ ಬಾಗಿಲು ಮತ್ತು ಮನಸ್ಸಿನ ಬಾಗಿಲು ಸಾರ್ವಜನಿಕರಿಗಾಗಿ ಯಾವಾಗಲೂ ತೆರೆದಿರುತ್ತದೆ. ಯಾರೇ ಆದರೂ ತಮ್ಮ ಸಮಸ್ಯೆಗಳನ್ನು ಹೊತ್ತು ನೇರವಾಗಿ ನನ್ನನ್ನು ಭೇಟಿ ಮಾಡಬಹುದು. ಸಾರ್ವಜನಿಕರ ಅನುಕೂಲಕ್ಕಾಗಿ ಶೀಘ್ರದಲ್ಲೇ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರ ಜನಸಂಪರ್ಕ ಕಚೇರಿಯನ್ನು ಉದ್ಘಾಟಿಸಲಾಗುವುದು. ಇದರಿಂದ ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ನನ್ನನ್ನು ಸುಲಭವಾಗಿ ಸಂಪರ್ಕಿಸಲು ಮತ್ತು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಭರವಸೆ ನೀಡಿದರು.
ಈ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲು ಸಜ್ಜಾಗಿರುವ ಸಮರ್ಥ್ ಶಾಮನೂರು, ಯುವ ನೇತೃತ್ವದಲ್ಲಿ ಕ್ಷೇತ್ರದ ಅಭಿವೃದ್ಧಿಯ ಹೊಸ ಅಲೆ ಎಬ್ಬಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.







