ಬೆಂಗಳೂರು : ಯಾರಿಗೂ ಆತಂಕ ಬೇಡ, ನಾನು ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆ ಎಂದು ವೈದ್ಯರು ಹೇಳಿದ್ದಾರೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಆಸ್ಪತ್ರೆಯಿಂದ ವಿಡಿಯೋ ಸಂದೇಶ ಕಳುಹಿಸಿದ್ದಾರೆ.
ವಿಡಿಯೋ ಸಂದೇಶದಲ್ಲಿ ಬಿಎಸ್ ವೈ, ಭಾನುವಾರ ರಾತ್ರಿ 8-9 ಗಂಟೆಗೆ ಕೊರೊನಾ ಪಾಸಿಟಿವ್ ಎಂದು ತಿಳಿಯಿತು. ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ವೈದ್ಯರು ಭಾನುವಾರ ರಾತ್ರಿ ಹಾಗೂ ಇಂದು ಬೆಳಗ್ಗೆ ಪರೀಕ್ಷೆ ಮಾಡಿ ಯಾವುದೇ ತೊಂದರೆ ಇಲ್ಲ ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಎಂದು ಹೇಳಿದ್ದಾರೆ. ಈಗಾಗಲೇ ನಮ್ಮ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಅನೇಕ ಮಠಾಧೀಶರು ಕರೆ ಮಾಡಿ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ. ನಿನ್ನೆಯಿಂದಲೇ ನಾನು ಅಧಿಕಾರಿಗಳ ಸಂಪರ್ಕದಲ್ಲಿದ್ದೇನೆ. ಸರ್ಕಾರದ ಯಾವುದೇ ಕೆಲಸಗಳಿಗೆ ಅಡ್ಡಿಯಾಗಬಾರದೆಂದು ಅವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
https://www.youtube.com/watch?v=stN9GDMBxW8
ಇನ್ನು ಯಾರು ಆತಂಕ ಪಡುವ ಅಗತ್ಯವಿಲ್ಲ. ಆದಷ್ಟು ಬೇಗ ಗುಣಮುಖನಾಗಿ ಹೊರ ಬಂದು ಕರ್ತವ್ಯದಲ್ಲಿ ತೊಡಗುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಬೆಂಬಲ ಇರಲಿ ಎಂದ ಸಿಎಂ, ನಾಡಿನ ಆರೂವರೆ ಕೋಟಿ ಜನರ ಆರೋಗ್ಯ ಮುಖ್ಯ. ಎಲ್ಲರೂ ದಯವಿಟ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ. ಇದರಿಂದ ಮಾತ್ರ ಕೊರೊನಾದಿಂದ ನಿಯಂತ್ರಣ ಸಾಧ್ಯ. ಇದನ್ನು ಎಲ್ಲರೂ ಎಚ್ಚರಿಕೆಯಿಂದ ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.