ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇದೇ ಫೆಬ್ರವರಿ 13 ಕರ್ನಾಟಕ ಬಂದ್ಗೆ ಕರೆ ನೀಡಿವೆ. ಕನ್ನಡಪರ ಸಂಘಟನೆಗಳ ಬಂದ್ ಕರೆಗೆ 600 ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಈಗಾಗಲೇ ತಮ್ಮ ಬೆಂಬಲವನ್ನ ಘೋಷಣೆ ಮಾಡಿವೆ. ಉಳಿದಂತೆ ಕೆಲ ಸಂಘಟನೆಗಳು ಬೆಂಬಲ ನೀಡದಿದ್ದರೂ, ನಾಳಿನ ಬಂದ್ ಆಚರಣೆಯಲ್ಲಿ ಸಾರ್ವಜನಿಕ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ನಾಳೆ ನಡೆಯಲಿರುವ ಬಂದ್ ಗೆ ಓಲಾ ಉಬರ್ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ತನ್ವೀರ್ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಾಡು, ನುಡಿಗೆ ಸಂಬಂಧಿಸಿದ ವಿಚಾರವಾಗಿರುವುದರಿಂದ ನಮ್ಮ ಯಾವುದೇ ವಾಹನಗಳು ರಸ್ತೆಗಿಳಿಯುವುದಿಲ್ಲ. ಓಲಾ ಉಬರ್ ಸಂಘಟನೆಯ 1 ಲಕ್ಷ ವಾಹನಗಳ ಸೇವೆಯನ್ನು ಬೆಳಗ್ಗೆಯಿಂದ ಸಂಜೆಯವರೆಗೆ ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ ಬಂದ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಬೆಂಬಲವನ್ನ ವ್ಯಕ್ತಪಡಿಸಿದ್ದಾರೆ. ಸರೋಜಿನಿ ಮಹಿಷಿ ವರದಿ ಜಾರಿ ಹೋರಾಟಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ಸೇನೆ, ಜಯಕರ್ನಾಟಕ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ನೀಡಿವೆ.
ಈ ನಡುವೆ ಖಾಸಗಿ ಶಾಲೆಗಳ ಒಕ್ಕೂಟ ಸೇರಿ ಕೆಲವು ಸಂಘಟನೆಗಳು ಬಂದ್ ಗೆ ಯಾವುದೇ ಬೆಂಬಲ ನೀಡಿಲ್ಲ. ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಚರ್ಚೆ ನಡೆಸಿ ಬಂದ್ ಬೆಂಬಲಿಸಬೇಕೆ? ಬೇಡವೇ ಎಂಬುದರ ಬಗ್ಗೆ ತೀರ್ಮಾನಿಸುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.