ಜಾಗತಿಕ ಅನಿಶ್ಚಿತತೆ, ಯುದ್ಧಗಳು ಹಾಗೂ ಪೂರೈಕೆ ಸರಪಳಿಯಲ್ಲಿನ ಅಡಚಣೆಗಳ ನಡುವೆಯೂ ಭಾರತ ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ದೇಶವು 7.8% ಆರ್ಥಿಕ ಬೆಳವಣಿಗೆ ದಾಖಲಿಸಿರುವ ಹಿನ್ನೆಲೆಯಲ್ಲಿ ಭಾರತೀಯರು ಸ್ವದೇಶಿ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಆತ್ಮನಿರ್ಭರ ಭಾರತದತ್ತ ಗಮನ ಹರಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
ಪ್ರಸ್ತುತ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಕಿರ್ಗಿಸ್ತಾನದ ಬಿಷ್ಕೆಕ್ಗೆ ತೆರಳಿರುವ ಪ್ರಧಾನಿ ಮೋದಿ, ಮಂಗಳವಾರ ಹಂಚಿಕೊಂಡ ವಿಡಿಯೋ ಸಂದೇಶದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ವಿದೇಶ ಪ್ರವಾಸ, ಮದುವೆ, ಚಿನ್ನದ ಬಗ್ಗೆಯೂ ಸಲಹೆ
ಸ್ವದೇಶಿ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ ನೀಡಿದ ಪ್ರಧಾನಿ ಮೋದಿ, ಅಗತ್ಯವಿಲ್ಲದಿದ್ದರೆ ವಿದೇಶ ಪ್ರವಾಸ ಕೈಗೊಳ್ಳದಂತೆ, ವಿದೇಶದಲ್ಲಿ ಮದುವೆ ಮಾಡುವುದನ್ನು ತಪ್ಪಿಸುವಂತೆ ಹಾಗೂ ಅಗತ್ಯವಿಲ್ಲದಿದ್ದರೆ ಚಿನ್ನ ಖರೀದಿಸದಂತೆ ಭಾರತೀಯರಿಗೆ ಸಲಹೆ ನೀಡಿದ್ದಾರೆ.
ಸ್ವದೇಶಿ ಉತ್ಪನ್ನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಿದಷ್ಟೂ ದೇಶದ ಆತ್ಮನಿರ್ಭರತೆ ಮತ್ತಷ್ಟು ಬಲವಾಗಲಿದೆ ಎಂದು ಅವರು ಹೇಳಿದ್ದಾರೆ.ಭಾರತದ ಸ್ವಾತಂತ್ರ್ಯದ 100ನೇ ವರ್ಷಾಚರಣೆಯ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ಯುವ ಪೀಳಿಗೆಗೆ ನೀಡುವುದು ತಮ್ಮ ಗುರಿಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.








