ನಿಪ್ಪಾಣಿ : ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ನಿಪ್ಪಾಣಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೇಡಕಿಹಾಳ ಮತ್ತು ಭೋಜ ಗ್ರಾಮಗಳಿಗೆ ಭೇಟಿ ನೀಡಿ, ಇಲಾಖೆ ಅಧಿಕಾರಿಗಳು, ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರೊಂದಿಗೆ ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಲಾಯಿತು ಹಾಗೂ ಮುನ್ನೆಚ್ಚರಿಗೆ ಕ್ರಮಗಳ ಕುರಿತು ಜನರಿಗೆ ತಿಳಿ ಹೇಳುವಂತೆ ತಿಳಿಸಿದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ಜನರ ಆರೋಗ್ಯದ ಹಿತದೃಷ್ಠಿಯಿಂದ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಮೇ 17 ವರೆಗೆ ಲಾಕ್ ಡೌನ್ ಘೋಷಿಸಿದ್ದಾರೆ. ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು.ಅಗತ್ಯ ವಸ್ತುಗಳನ್ನು ಕೊಳ್ಳುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಆದಷ್ಟು ಮನೆಯಲ್ಲೇ ಇರಿ ಸುರಕ್ಷಿತವಾಗಿರಿ. ಎಲ್ಲಾ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಸಹಕರಿಸಲು ವಿನಂತಿಸಿ, ಕೊರೋನಾ ವಿರುದ್ಧ ಹೋರಾಟದಲ್ಲಿ ಅವರುಗಳ ಶ್ರಮವನ್ನು ಶ್ಲಾಘಿಸಿದರು.ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಬೇಕು,ಕ್ವಾರಂಟೈನ್ ಇದ್ದವರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು, ಕಿರಾಣಿ ಸಾಮಾನು, ತರಕಾರಿಗಳನ್ನು ಹೆಚ್ಚಿನ ಬೆಲೆಗೆ ಮಾರುತ್ತಿದ್ದರೆ ನನ್ನ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಕಾರ್ಯಕರ್ತೆಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದರು.
ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಕೊರೋನಾ ಸಾಂಕ್ರಾಮಿಕ ತಡೆಗಟ್ಟುವಲ್ಲಿ ನಮಸ್ಕಾರದಿಂದ ಪ್ರಾರಂಭವಾಗುವ ಭಾರತೀಯ ಜೀವನ ಪದ್ಧತಿ, ಯೋಗ, ಆಯುರ್ವೇದ ಇತ್ಯಾದಿಗಳು ವಿಶ್ವಕ್ಕೆ ಪಾಠ ಕಲಿಸಿದ್ದು ನಮ್ಮ ದೇಶದ ಹೆಮ್ಮೆಯ ಪ್ರತೀಕವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ ವೈರಸ್ ಜೊತೆಯಲ್ಲಿ ನಾವು ಜೀವನ ನಡೆಸಬೇಕಾದ ಅನಿವಾರ್ಯತೆಯ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ, ಸರ್ಕಾರದ ಜೊತೆಯಲ್ಲಿ ಸಾರ್ವಜನಿಕರೂ ಜವಾಬ್ದಾರಿಯಿಂದ ವರ್ತಿಸುವ ಅಗತ್ಯವಿದ್ದು, ಆಪ್ತ ಮಿತ್ರ, ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್ ಗಳನ್ನು ಜನರು ಬಳಸುವಂತೆ ಜಾಗೃತಿ ಮೂಡಿಸಲು ಕರೆ ನೀಡಿದರು.








