ನವದೆಹಲಿ: ಶಾಸಕರು, ಸಂಸದರ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ವಿಶೇಷ ಪೀಠ ರಚಿಸಬೇಕು ಹಾಗೂ ಪೀಠದ ನೇತೃತ್ವ ಹೈಕೋರ್ಟ್ (High Court) ಮುಖ್ಯ ನ್ಯಾಯಮೂರ್ತಿಗಳು ವಹಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ (Supreme Court) ಸೂಚಿಸಿದೆ.
ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಬೇಕು. ಆರು ವರ್ಷಗಳ ನಿಷೇಧಕ್ಕೆ ವಿರುದ್ಧವಾಗಿ ಹಾಲಿ ಶಾಸಕರು ಸೇರಿದಂತೆ ಅಪರಾಧಿ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಜೀವಮಾನದ ನಿಷೇಧ ಹೇರುವಂತೆ ವಕೀಲ ಹಾಗೂ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ನೇತೃತ್ವದ ಪೀಠ ವಿಚಾರಣೆ ನಡೆಸಿತ್ತು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ, ಸಂಸದರು ಅಥವಾ ಶಾಸಕರ ವಿರುದ್ಧ ಮರಣದಂಡನೆ ವಿಧಿಸಬಹುದಾದ ಪ್ರಕರಣಗಳಿಗೆ ಎಲ್ಲ ಪ್ರಕರಣಗಳಿಗಿಂತಲೂ ಹೆಚ್ಚಿನ ಆದ್ಯತೆ ನೀಡಬೇಕು. ಸಂಬಂಧಪಟ್ಟ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ಅಂತಹ ಪ್ರಕರಣಗಳ ವಿಚಾರಣೆಗೆ ಸಾಕಷ್ಟು ಮೂಲಸೌಕರ್ಯ ಸೌಲಭ್ಯಗಳು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಹೇಳಲಾಗಿದೆ.