ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿಜೆಪಿ ಕಚೇರಿ ನಿರ್ಮಾಣಕ್ಕೆ ಜಾಗ ಹಂಚಿಕೆ ಮರು ಆದೇಶಕ್ಕೆ ನಿರ್ಧಾರ – ಮಾಧುಸ್ವಾಮಿ
ಬೆಳಗಾವಿ : ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನ ಕೈಗೊಳ್ಳಲಾಗಿದೆ. ಈ ಬಗ್ಗೆ ಕಾನೂನು ಸಚಿವ ಸಚಿವ ಜೆ ಸಿ ಮಾಧುಸ್ವಾಮಿ ಅವರು ಮಾಹಿತಿ ನೀಡಿದ್ದಾರೆ. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬಿಜೆಪಿ ಕಚೇರಿ ನಿರ್ಮಾಣಕ್ಕೆ ಜಾಗ ಹಂಚಿಕೆ ಮರು ಆದೇಶಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಧುಸ್ವಾಮಿ ಅವರು ತಿಳಿಸಿದ್ದಾರೆ.
ಅಲ್ಲದೇ ಮಂಡ್ಯ ಜಿಲ್ಲೆ, ಕೆ.ಆರ್. ಪೇಟೆ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ಹತ್ತಿರ ಹೇಮಾವತಿ ನದಿಯಿಂದ ನೀರನ್ನು ಎತ್ತಿ ಕೆ.ಆರ್. ಪೇಟೆ ತಾಲ್ಲೂಕಿಗೆ ಸೇರಿದ 11 ಕೆರೆಗಳನ್ನು ತುಂಬಿಸುವ ಕಾಮಗಾರಿಯ (ರಂಗೇನಹಳ್ಳಿ ಕುಡಿಯುವ ನೀರಿನ ಯೋಜನೆ-ಹಂತ 2) ರೂ. 22.50 ಕೋಟಿ ಮೊತ್ತದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿರೋದಾಗಿ ತಿಳಿಸಿದ್ದಾರೆ.
ಇದೇ ವೇಳೆ ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆಲೂರು-ಪಿಟ್ಲಳ್ಳಿ ಗ್ರಾಮಗಳ ಮಧ್ಯೆ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ ಕಾಮಗಾರಿಯ ರೂ. 15.66 ಕೋಟಿ ಮೊತ್ತದ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವ ಬಗ್ಗೆಯೂ ಮಾಧುಸ್ವಾಮಿ ಅವರು ಮಾಹಿತಿ ನೀಡಿದ್ರು.