ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜೂ.28ಕ್ಕೆ ಜೆಡಿಎಸ್ ಪ್ರತಿಭಟನೆ
ಬೆಂಗಳೂರು : ದೇಶದಲ್ಲಿ ತೈಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರದ ರೈತ ವಿರೋಧಿ ಧೋರಣೆ ಖಂಡಿಸಿ ಜೂನ್ 28 ರಂದು ಜೆಡಿಎಸ್ ಪ್ರತಿಭಟನೆ ನಡೆಸಲಿದೆ.
ಈ ಕುರಿತು ಪಕ್ಷದ ಕಚೇರಿಯಲ್ಲಿ ಜೆಡಿಎಸ್ ರಾಜಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಅವರು, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ.
ದಿನದಿಂದ ದಿನಕ್ಕೆ ತೈಲ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಈ ಹಿನ್ನೆಲೆ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ.
ಬೆಳಗ್ಗೆ 11 ಗಂಟೆಗೆ ಜೆಪಿ ಭವನದಿಂದ ಮೌರ್ಯ ಸರ್ಕಲ್ನಲ್ಲಿರುವ ಗಾಂಧಿ ಪ್ರತಿಮೆವರೆಗೂ ರ್ಯಾಲಿ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡುತ್ತೇವೆ ಎಂದು ತಿಳಿಸಿದರು.
ಇನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ.
ಕೊರೊನಾ ಸಮಯದಲ್ಲಿ ಜನರು ಆರ್ಥಿಕವಾಗಿ, ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಮೇಲೆ ಹೊರೆ ಹೊರಿಸಲಾಗಿದೆ.
ಇದನ್ನ ವಿರೋಧಿಸಿ ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಯಲಿದ್ದೇವೆ ಎಂದು ಮಾಹಿತಿ ನೀಡಿದರು.









