ನಾಗಮಂಗಲ: ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ ಮತ್ತು ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನಗಳ ವಿರುದ್ಧ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ ವೀರಪ್ಪ ಅವರು ಸಿಡಿದೆದ್ದಿದ್ದಾರೆ. ನಾಗಮಂಗಲದಲ್ಲಿ ನಡೆದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಮತ್ತು ವಿಲೇವಾರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರಶಾಹಿ ಮತ್ತು ರಾಜಕೀಯ ವ್ಯವಸ್ಥೆಗೆ ನೇರ ಎಚ್ಚರಿಕೆ ನೀಡಿದ್ದಾರೆ.
ನಮಗೆ ಹಾಕಿರುವ ಬೇಡಿಯನ್ನು ಒಮ್ಮೆ ಬಿಚ್ಚಿ ನೋಡಿ, ಈ ಇಡೀ ಕರ್ನಾಟಕವನ್ನೇ ಭ್ರಷ್ಟಾಚಾರ ಮುಕ್ತಗೊಳಿಸಿ ಸ್ವಚ್ಛ ಮಾಡುತ್ತೇವೆ ಎಂದು ನ್ಯಾ ವೀರಪ್ಪ ಅವರು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಲೋಕಾಯುಕ್ತ ಸಂಸ್ಥೆಯನ್ನು ಬಲಹೀನ ಮಾಡಲು ವ್ಯವಸ್ಥಿತ ಸಂಚುಗಳು ನಡೆಯುತ್ತಿವೆ. ಆದರೆ ಅಕ್ರಮಗಳನ್ನು ಕಂಡಾಗ ನನ್ನ ರಕ್ತ ಕುದಿಯುತ್ತದೆ, ಇಂತಹ ಅನ್ಯಾಯಗಳನ್ನು ನೋಡಿ ಸುಮ್ಮನಿರಲು ನನ್ನಿಂದ ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ವಿವಿಧ ಇಲಾಖೆಗಳ ಪರಿಸ್ಥಿತಿಯನ್ನು ಕಂಡು ಬೇಸರ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ಇಂದು ಒಂದೊಂದು ಸರ್ಕಾರಿ ಇಲಾಖೆಗಳು ಜಿದ್ದಿಗೆ ಬಿದ್ದಂತೆ ಭ್ರಷ್ಟಾಚಾರದಲ್ಲಿ ಪೈಪೋಟಿ ನಡೆಸುತ್ತಿವೆ. ಉನ್ನತ ಮಟ್ಟದಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದ್ದು, ಇದಕ್ಕೆ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆ. ಲೋಕಾಯುಕ್ತ ಸಂಸ್ಥೆಗೆ ಪೂರ್ಣ ಪ್ರಮಾಣದ ಅಧಿಕಾರ ನೀಡಿದರೆ ರಾಜ್ಯವನ್ನು ಭ್ರಷ್ಟ ಮುಕ್ತಗೊಳಿಸುವುದು ಕಷ್ಟದ ಕೆಲಸವಲ್ಲ ಎಂದು ಅಭಿಪ್ರಾಯಪಟ್ಟರು.
ಬಡವರು ಮತ್ತು ರೈತರ ರಕ್ತ ಹೀರುತ್ತಿರುವ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಲು ತಾವು ನೇರವಾಗಿ ತಾಲೂಕು ಮಟ್ಟಕ್ಕೆ ಇಳಿದಿರುವುದಾಗಿ ಅವರು ತಿಳಿಸಿದರು. ಅಧಿಕಾರಿಗಳಿಗೆ ಕಾನೂನಿನ ಅರಿವಿದ್ದರೂ ಸಹ ಏನೂ ತಿಳಿಯದವರಂತೆ ನಟಿಸುತ್ತಾ ಸಾರ್ವಜನಿಕರನ್ನು ಸತಾಯಿಸುತ್ತಿದ್ದಾರೆ. ರೈತರಿಂದ ಹಣ ಕಿತ್ತು ಬದುಕುವ ಇಂತಹ ಅಧಿಕಾರಿಗಳಿಗೆ ಚಾಟಿ ಬೀಸಿ ಕೆಲಸ ಮಾಡಿಸುವ ಕೆಲಸವನ್ನು ಲೋಕಾಯುಕ್ತ ಸಂಸ್ಥೆ ನಿರಂತರವಾಗಿ ಮಾಡಲಿದೆ ಎಂದು ಅವರು ಎಚ್ಚರಿಸಿದರು.
ಸ್ವಾತಂತ್ರ್ಯ ಬಂದು ಏಳು ದಶಕಗಳಾದರೂ ಸಾಮಾನ್ಯ ಜನರು ಇನ್ನೂ ಸ್ವತಂತ್ರವಾಗಿ ಬದುಕಲು ಸಾಧ್ಯವಾಗುತ್ತಿಲ್ಲ ಎಂಬುದು ವಿಷಾದನೀಯ ಸಂಗತಿ. ಪ್ರಾಮಾಣಿಕ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆ ಯಾವಾಗಲೂ ಬೆಂಬಲವಾಗಿ ನಿಲ್ಲುತ್ತದೆ. ಆದರೆ ಭ್ರಷ್ಟರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂಬ ಸಂದೇಶವನ್ನು ನ್ಯಾ ವೀರಪ್ಪ ಅವರು ರವಾನಿಸಿದ್ದಾರೆ. ನ್ಯಾಯಮೂರ್ತಿಗಳ ಈ ಸ್ಫೋಟಕ ಹೇಳಿಕೆಗಳು ಈಗ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಭಾರಿ ಸಂಚಲನ ಮೂಡಿಸಿವೆ.







