ನಟಿ, ರಾಜಕಾರಣಿ ಕಂಗನಾ ರಣಾವತ್(Kangana Ranaut) ಮೇಲೆ ಹಲ್ಲೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.
ಹಿಮಾಚಲ ಪ್ರದೇಶದಲ್ಲಿ (Himachal Pradesh )ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್, ಮತ್ತು ವಿಧಾನಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ರವಿ ಠಾಕೂರ್ ಭಾಗವಹಿಸಿದ್ದ ಮೆರವಣಿಗೆ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಹೀಗಾಗಿ ಬಿಜೆಪಿ ಹಿಮಾಚಲ ಪ್ರದೇಶ ಘಟಕವು ಭಾರತೀಯ ಚುನಾವಣಾ ಆಯೋಗಕ್ಕೆ (Election Commission of India) ದೂರು ಸಲ್ಲಿಸಿದೆ.
ಕಾಂಗ್ರೆಸ್ ಪಕ್ಷವು ತಮ್ಮ ರ್ಯಾಲಿಗೆ ಅಡ್ಡಿಪಡಿಸಲು ಪೂರ್ವಯೋಜಿತ ಯೋಜನೆಯನ್ನು ರೂಪಿಸಿತ್ತು ಎಂದು ಆರೋಪಿಸಿದ್ದಾರೆ. ಅದೇ ವೇಳೆ ಬಿಜೆಪಿ ಕಾರ್ಯಕ್ರಮದ ಪಕ್ಕದಲ್ಲಿ ಕಾಂಗ್ರೆಸ್ ಸಭೆಗೆ ಅನುಮತಿ ನೀಡಿದ ಜಿಲ್ಲಾಡಳಿತದ ನಿರ್ಧಾರವು ಪ್ರಭಾವ ಮತ್ತು ಪಕ್ಷಪಾತಕ್ಕೆ ಸಾಕ್ಷಿ ಎಂದು ಬಿಜೆಪಿ ಆರೋಪಿಸಿದೆ.
ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಮೆರವಣಿಗೆಯನ್ನು ತಡೆಯಲು ಪ್ರಯತ್ನಿಸಿದ್ದು ಕಲ್ಲು ತೂರಾಟವನ್ನೂ ಮಾಡಿದರು. ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಪ್ರತಿಭಟನೆಯನ್ನು ಎದುರಿಸಬೇಕಾಯಿತು. ಅಲ್ಲದೇ, ಕಪ್ಪು ಬಾವುಟ ತೋರಿಸಿ ವಾಪಸ್ ಹೋಗುವಂತೆ ಘೋಷಣೆಗಳನ್ನು ಕೂಗಿದರು ಎಂದು ಆರೋಪಿಸಲಾಗಿದೆ.