ಗೋವಾದಲ್ಲಿ ಕನ್ನಡಿಗರ ಬದುಕು ಡೋಲಾಯಮಾನ : ಹೆಚ್ ಡಿಕೆ
ಬೆಂಗಳೂರು : ಗೋವಾದಲ್ಲಿ ಕರ್ನಾಟಕ ಮೂಲದ ಒಂದೇ ಕುಟುಂಬದವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮರುಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಬಗ್ಗೆ ಗಮನ ಹರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಗೋವಾದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಮುದ್ದೇಬಿಹಾಳ ಮೂಲದ ಒಂದೇ ಕುಟುಂಬದ ಮೂವರು ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಗೋವಾದಲ್ಲಿ ಕನ್ನಡಿಗರ ಬದುಕು ಎಂಥಾ ಡೋಲಾಯಮಾನ ಪರಿಸ್ಥಿತಿಯಲ್ಲಿದೆ, ಅಲ್ಲಿ ಕನ್ನಡಿಗರು ಎಂಥ ಅಪಾಯಕಾರಿ ಜೀವನ ನಡೆಸುತ್ತಿದ್ದಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ.
ಪ್ರಕರಣವೊಂದರಲ್ಲಿ ಕನ್ನಡಿಗ ಕುಟುಂಬಕ್ಕೆ ಗೋವಾದ ಪೊಲೀಸರು ಕಿರುಕುಳ ನೀಡಿದ್ದರು ಎಂಬುದು ಅವರ ಡೆತ್ನೋಟ್ನಲ್ಲೇ ಇದೆ ಎನ್ನಲಾಗಿದೆ. ಕಳ್ಳತನದಂಥ ಬಂಡ ಬಾಳು ಬದುಕಿದ್ದಿದ್ದರೆ ಆ ಕುಟುಂಬ ಆತ್ಮಹತ್ಯೆಯಂಥ ನಿರ್ಧಾರಕ್ಕೆ ಬರುತ್ತಿರಲಿಲ್ಲ. ಕನ್ನಡಿಗರೆಂಬ ಕಾರಣಕ್ಕೆ ಈ ಕುಟುಂಬದ ಮೇಲೆ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿ ಕಾಣುತ್ತಿದೆ.
ಮೂವರ ಆತ್ಮಹತ್ಯೆ ನಂತರ ಪೊಲೀಸರೂ ಅನುಮಾನಾಸ್ಪದವಾಗಿ ವರ್ತಿಸಿದ್ದಾರೆ. ತರಾತುರಿಯಲ್ಲಿ ಪಂಚನಾಮೆ ನಡೆಸಿದ್ದಾರೆ ಎಂಬ ಆರೋಪ ಸ್ಥಳೀಯ ಕನ್ನಡ ಸಂಘಟನೆಗಳಿಂದ ವ್ಯಕ್ತವಾಗಿದೆ. ಈ ಬಗ್ಗೆ ಗೋವಾ ಮುಖ್ಯಮಂತ್ರಿ ಕೂಡಲೇ ಗಮನ ಹರಿಸಬೇಕು. ಪೊಲೀಸ್ ಕಿರುಕುಳದ ನಿಟ್ಟಿನಲ್ಲಿ ತನಿಖೆ ನಡೆಯಬೇಕು. ಈ ಮೂಲಕ ಕನ್ನಡಿಗರ ಸುರಕ್ಷತೆಯನ್ನು ಖಾತ್ರಿಪಡಿಸಬೇಕು.
ಗೋವಾದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯಗಳಿಗೆ ಕೊನೆಮೊದಲಿಲ್ಲ ಎಂಬಂತಾಗಿದೆ. ಕನ್ನಡಿಗರನ್ನು ಒಕ್ಕಲೆಬ್ಬಿಸುವುದರಿಂದ ಆರಂಭಿಸಿ, ಸಣ್ಣ ಪುಟ್ಟ ಪ್ರಕರಣಗಳಲ್ಲಿ ಸಿಲುಕಿಸುವ ವರೆಗೆ ವಿಧವಿಧದ ದೌರ್ಜನ್ಯಗಳು ನಡೆಯುತ್ತಲೇ ಇವೆ. ಈ ಬಗ್ಗೆ ಕರ್ನಾಟಕ ಸರ್ಕಾರವೂ ಗಮನಹರಿಸಬೇಕು. ನಾನೂ ಕೂಡ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದ್ದಾರೆ.