ಮಂಡ್ಯ : ರಾಜ್ಯ ವಿಧಾನಸಭೆಗೆ ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಒಂದು ದಿನ ಕಳೆದರೆ ಮತದಾನದ ದಿನ ಬರಲಿದೆ. ಈ ಸಂದರ್ಭದಲ್ಲಿಯೇ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದಿದೆ.
ಈ ಘಟನೆ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಡು ಬೀದಿಯಲ್ಲಿಯೇ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ. ಕೈ ಕೈ ಮಿಲಾಯಿಸಿದ್ದಾರೆ. ಅಲ್ಲದೇ, ಕಲ್ಲು ತೂರಾಟ ನಡೆಸಿದ್ದರಿಂದಾಗಿ ಎರಡೂ ಪಕ್ಷಗಳಲ್ಲಿನ ಹಲವರ ವಾಹನದ ಗಾಜುಗಳು ಪುಡಿ ಪುಡಿಯಾಗಿವೆ. ನಾಗಮಂಗಲದ ಐಬಿ ವೃತ್ತದ ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಜೆಡಿಎಸ್ ನ ಪ್ರಚಾರದ ವಾಹನ ಬಂದಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಲ್ಲೂ ತೂರಾಟ ನಡೆಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸುತ್ತಿದ್ದಂತೆಯೇ ಕಾಂಗ್ರೆಸ್ ಪ್ರಚಾರದ ವಾಹನದ ಮೇಲೆ ಜೆಡಿಎಸ್ ಕಾರ್ಯಕರ್ತರು ಪ್ರತಿದಾಳಿ ನಡೆಸಿ, ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಕ್ಕೆ ತೆರಳಿದ್ದು, ಎರಡೂ ಕಡೆಯವರು ಕೈ ಕೈ ಮಿಲಾಯಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರೊಬ್ಬರನ್ನು ಕಾಂಗ್ರೆಸ್ ಕಾರ್ಯಕರ್ತರು ಥಳಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರೂ ಸಹ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.








