ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Polls 2023 ) ಕಣ ರಂಗೇರಿದ್ದು, ನಾಯಕರು ಗೆಲ್ಲುವ ತಂತ್ರ- ಪ್ರತಿತಂತ್ರ ರೂಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾತಿನ ಭರಾಟೆ ಜೋರಾಗುತ್ತಿದೆ. ಹಲವು ಹೇಳಿಕೆಗಳು ವಿವಾದ ಸೃಷ್ಟಿಸುತ್ತಿವೆ. ಹೀಗಾಗಿ ದೂರು – ಪ್ರತಿದೂರು ದಾಖಲಾಗುತ್ತಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋಮು ಗಲಭೆಗೆ ಪ್ರಚೋದನೆ ಆರೋಪಿಸಿ ಕಾಂಗ್ರೆಸ್ ದೂರು ನೀಡಿತ್ತು. ಸದ್ಯ ಬಿಜೆಪಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(priyanka gandhi) ವಿರುದ್ಧ ದೂರು ದಾಖಲಿಸಿದೆ. ಲಿಂಗಾಯತರನ್ನು ಬಿಜೆಪಿ ಪಕ್ಷ ಅವಮಾನಿಸಿದೆ ಎಂಬ ಹೇಳಿಕೆ ಆರೋಪಿಸಿ ಮೈಸೂರು ಗ್ರಾಮಾಂತರ ಕಾನೂನು ಘಟಕ ಪ್ರಿಯಾಂಕಾ ಗಾಂಧಿ ವಿರುದ್ಧ ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದೆ ಎನ್ನಲಾಗಿದೆ.
ಮೈಸೂರಿನ ಕೆ.ಆರ್.ನಗರ ಕ್ಷೇತ್ರದ ಪ್ರಚಾರದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಜಾತಿ, ಧರ್ಮದ ವಿಚಾರ ಬಳಸಿ ಪ್ರಚಾರ ಮಾಡಿದ್ದಾರೆ. ಈ ಮೂಲಕ ಚುನಾವಣಾ ಸಮಯದಲ್ಲಿ ಇದು ನಿಯಮ ಉಲ್ಲಂಘನೆ ಆಗುತ್ತದೆ. ಇಂತಹ ಹೇಳಿಕೆಗಳು ಚುನಾವಣಾ ಸಮಯದಲ್ಲಿ ಪಕ್ಷದ ಮತ್ತು ಅಭ್ಯರ್ಥಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ನೀಡಿದ್ದರು.








