ಒಟ್ಟಾವಾ: ಕೆನಡಾದ (Canadaa) ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ (Indian-origin MP Chandra Arya) ನಾಮಪತ್ರ ಸಲ್ಲಿಸಿದ್ದಾರೆ. ಲಿಬರಲ್ ಪಕ್ಷದಿಂದ ಪ್ರಧಾನಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸಿದ ನಂತರ ಚಂದ್ರ ಆರ್ಯ ಕನ್ನಡ(Kannada)ದಲ್ಲೇ ಮಾತನಾಡಿರುವುದು ಕೂಡ ವಿಶೇಷವಾಗಿದೆ.
ಕರ್ನಾಟಕದ (Karnataka) ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಲು ಗ್ರಾಮದ ವ್ಯಕ್ತಿಯೊಬ್ಬರು ಕೆನಡಾದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಗೌರವಾನ್ವಿತ ಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಸಂತಸದಿಂದ ಹೇಳಿದ್ದಾರೆ,.
ಅಲ್ಲದೇ, ಅವರು ತಮ್ಮ ಭಾಷಣದ ಕೊನೆಗೆ ರಾಷ್ಟ್ರಕವಿ ಕುವೆಂಪು ಅವರ ಹಾಗೂ ನಟ ಡಾ.ರಾಜ್ಕುಮಾರ್ ಅವರು ಹಾಡಿದ್ದ ಪ್ರಸಿದ್ಧ ಹಾಡಿನ ಸಾಲು ಹೇಳಿದ್ದಾರೆ. ಎಲ್ಲಾದರೂ ಇರು ಎಂಥಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ಹೇಳಿ ತಮ್ಮ ಮಾತಿಗೆ ಪೂರ್ಣ ವಿರಾಮ ಹಾಕಿದ್ದಾರೆ. ಹಿಂದೆ ಸಂಸದರಾಗಿ ಆಯ್ಕೆಯಾದ ವೇಳೆಯೂ ಸಂಸತ್ನಲ್ಲಿ ಕನ್ನಡದಲ್ಲಿ ಮಾತನಾಡಿ ಅವರು ಗಮನ ಸೆಳೆದಿದ್ದರು.
ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಕೂಡ ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
ತುಮಕೂರು ಮೂಲದ ಆರ್ಯ, ಧಾರವಾಡದಲ್ಲಿನ ಕೌಸಾಲಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನಿಂದ ಎಂಬಿಎ ಪದವಿ ಪಡೆದಿದ್ದಾರೆ. 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.








