ರಾಜ್ಯದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಆಯವ್ಯಯ ಮಂಡನೆಗೆ ಸಜ್ಜಾಗಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿರಲಿದ್ದು, ರಾಜ್ಯದ ಜನತೆ ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಬಜೆಟ್ ಅಧಿವೇಶನವು ಮಾರ್ಚ್ 6ರಂದು ಆರಂಭಗೊಂಡು ಮಾರ್ಚ್ 27ರವರೆಗೆ ಒಟ್ಟು 14 ದಿನಗಳ ಕಾಲ ನಡೆಯಲಿದ್ದು, ಮಾರ್ಚ್ 6ರಂದೇ ಬಜೆಟ್ ಮಂಡನೆಯಾಗಲಿದೆ. ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸು ಹೊಂದಿಸುವುದು ಸರ್ಕಾರಕ್ಕೆ ಸವಾಲಾಗಿದ್ದು, ಈ ಬಾರಿಯ ಬಜೆಟ್ನಲ್ಲಿ ಯಾವ ವಲಯಕ್ಕೆ ಆದ್ಯತೆ ಸಿಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯವೇನು
ಬಜೆಟ್ ಸಮೀಪಿಸುತ್ತಿದ್ದಂತೆಯೇ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇರುವುದರಿಂದ ಗ್ಯಾರಂಟಿಗಳಿಗೆ ಬ್ರೇಕ್ ಬೀಳಬಹುದೇ ಎಂಬ ಪ್ರಶ್ನೆ ಮೂಡಿತ್ತು. ಆದರೆ ಲಭ್ಯವಿರುವ ಮಾಹಿತಿಯ ಪ್ರಕಾರ, ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳು ಯಥಾವತ್ತಾಗಿ ಮುಂದುವರಿಯಲಿವೆ. ಈ ಯೋಜನೆಗಳನ್ನು ನಿಲ್ಲಿಸುವ ಯಾವುದೇ ಪ್ರಸ್ತಾಪವಿಲ್ಲ, ಬದಲಾಗಿ ಈ ಯೋಜನೆಗಳಿಗೆ ಬಜೆಟ್ನಲ್ಲಿ ಹೆಚ್ಚಿನ ಅನುದಾನವನ್ನು ಮೀಸಲಿಡುವ ಸಾಧ್ಯತೆ ದಟ್ಟವಾಗಿದೆ.
ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಮತ್ತು ಹೊಸ ಆಸ್ಪತ್ರೆಗಳು
ಈ ಬಾರಿಯ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಂಹಪಾಲು ಸಿಗುವ ನಿರೀಕ್ಷೆಯಿದೆ. ಸ್ವತಃ ಮುಖ್ಯಮಂತ್ರಿಗಳೇ ಭರವಸೆ ನೀಡಿರುವಂತೆ ಉತ್ತರ ಕನ್ನಡ ಜಿಲ್ಲೆಗೆ ಬಹುನಿರೀಕ್ಷಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಕೇವಲ ಉತ್ತರ ಕನ್ನಡವಲ್ಲದೆ ಒಟ್ಟು 3 ಜಿಲ್ಲೆಗಳಲ್ಲಿ ವಿಶೇಷ ಆಸ್ಪತ್ರೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಜೊತೆಗೆ ಮಂಡ್ಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಘೋಷಣೆಯಾಗುವ ನಿರೀಕ್ಷೆಯಿದೆ.
ವೈದ್ಯಕೀಯ ಶಿಕ್ಷಣ ಮತ್ತು ಹೊಸ ಕಾಲೇಜುಗಳು
ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣವನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆ. ಪ್ರಸ್ತುತ ರಾಜ್ಯದಲ್ಲಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿದ್ದು, ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಲ್ಲಿ ಹೊಸ ಕಾಲೇಜುಗಳನ್ನು ಸ್ಥಾಪಿಸಲು ಆದ್ಯತೆ ನೀಡಲಾಗುತ್ತದೆ. ಪ್ರಮುಖವಾಗಿ ಕೋಲಾರ, ಪುತ್ತೂರು ಮತ್ತು ಬಿಜಾಪುರಗಳಲ್ಲಿ ನೂತನ ವೈದ್ಯಕೀಯ ಕಾಲೇಜುಗಳ ಘೋಷಣೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್
ರಾಜ್ಯದ ರಾಜಧಾನಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್ನಲ್ಲಿ ವಿಶೇಷ ಒತ್ತು ನೀಡಲಾಗುತ್ತಿದೆ. ನಗರದ ಪ್ರಮುಖ ಸಮಸ್ಯೆಯಾಗಿರುವ ರಸ್ತೆ ಗುಂಡಿಗಳಿಗೆ ಶಾಶ್ವತ ಮುಕ್ತಿ ನೀಡಲು ಮತ್ತು ರಸ್ತೆ ಸುಧಾರಣೆಗೆ ಹೆಚ್ಚಿನ ಹಣ ಮೀಸಲಿಡಲಾಗುತ್ತದೆ. ವೈಟ್ಟಾಪಿಂಗ್ ಕಾಮಗಾರಿಗಳಿಗೆ ಮತ್ತು ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ನಗರದ ನಾಲ್ಕು ದಿಕ್ಕುಗಳಲ್ಲಿ ಆಧುನಿಕ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣಕ್ಕೆ ಅನುದಾನ ಘೋಷಣೆಯಾಗಲಿದೆ. ಬೆಂಗಳೂರಿನ ನೀರಿನ ಬಾಯಾರಿಕೆ ಇಂಗಿಸಲು ಕಾವೇರಿ 6ನೇ ಹಂತದ ಯೋಜನೆಯ ಅನುಷ್ಠಾನದ ಬಗ್ಗೆಯೂ ಬಜೆಟ್ನಲ್ಲಿ ಪ್ರಸ್ತಾಪವಾಗುವ ಸಾಧ್ಯತೆಯಿದೆ.
ನೀರಾವರಿ ಮತ್ತು ಕೃಷಿ ವಲಯದ ನಿರೀಕ್ಷೆಗಳು
ರೈತರ ಜೀವನಾಡಿಯಾಗಿರುವ ನೀರಾವರಿ ಯೋಜನೆಗಳಿಗೆ ಈ ಬಾರಿಯ ಬಜೆಟ್ನಲ್ಲಿ ಬಲ ಸಿಗಲಿದೆ. ಬಯಲುಸೀಮೆ ಭಾಗದ ಪ್ರಮುಖ ಯೋಜನೆಯಾದ ಎತ್ತಿನಹೊಳೆ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮತ್ತು ಕೆರೆ ತುಂಬಿಸುವ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಲಿದೆ. ಕಾವೇರಿ 6ನೇ ಹಂತ, ವಾರಾಹಿ ಬಲದಂಡೆ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ (UKP) 3ನೇ ಹಂತದ ಕಾಮಗಾರಿಗಳಿಗೆ ಬಜೆಟ್ನಲ್ಲಿ ಹಣ ಮೀಸಲಿಡುವ ನಿರೀಕ್ಷೆಯಿದೆ. ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ವಿಶೇಷ ಅನುದಾನವನ್ನು ರೈತರು ನಿರೀಕ್ಷಿಸುತ್ತಿದ್ದಾರೆ.
ಕರಾವಳಿ ಮತ್ತು ಮಲೆನಾಡು ಭಾಗದ ಯೋಜನೆಗಳು
ಕರಾವಳಿ ಮತ್ತು ಮಲೆನಾಡು ಭಾಗದ ಜನರ ಸಮಸ್ಯೆಗಳಿಗೂ ಬಜೆಟ್ನಲ್ಲಿ ಪರಿಹಾರ ಸಿಗುವ ಲಕ್ಷಣಗಳಿವೆ. ಮಲೆನಾಡಿನಲ್ಲಿ ತೀವ್ರವಾಗಿ ಕಾಡುತ್ತಿರುವ ಮಂಗನ ಕಾಯಿಲೆಗೆ ಲಸಿಕೆ ಉತ್ಪಾದನಾ ಘಟಕ ಸ್ಥಾಪನೆ ಮತ್ತು ಕಾಡಾನೆ ಸಂಘರ್ಷ ತಡೆಗಟ್ಟಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅನುದಾನ ನೀಡುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ (ಮಂಗಳೂರು) ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲು ವಿಶೇಷ ಪ್ಯಾಕೇಜ್ ಹಾಗೂ ಬಂದರುಗಳಲ್ಲಿ ಹೂಳೆತ್ತಲು ಅನುದಾನ ಘೋಷಣೆಯಾಗುವ ನಿರೀಕ್ಷೆಯಿದೆ.
ಮೂಲಸೌಕರ್ಯ ರೈಲ್ವೆ ಮತ್ತು ಪ್ರವಾಸೋದ್ಯಮ
ಮೂಲಸೌಕರ್ಯ ಅಭಿವೃದ್ಧಿಯ ಭಾಗವಾಗಿ ಗದಗದಿಂದ ಯಲವಗಿವರೆಗಿನ 58 ಕಿ.ಮೀ. ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಘೋಷಿಸುವ ಸಾಧ್ಯತೆಯಿದೆ. ಅಲ್ಲದೆ, ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸಲು ವಿಶ್ವವಿಖ್ಯಾತ ಹಂಪಿ, ಹಳೆಬೀಡು ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚುವರಿ ಅನುದಾನವನ್ನು ನೀಡುವ ಮೂಲಕ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರ ನೀಡುವ ನಿರೀಕ್ಷೆಯಿದೆ.
ಸಿಎಂ ಸಿದ್ದರಾಮಯ್ಯ ಅವರ ಈ 17ನೇ ಬಜೆಟ್ ಕೇವಲ ಗ್ಯಾರಂಟಿಗಳಿಗೆ ಸೀಮಿತವಾಗದೆ, ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನವನ್ನು ಹೊಂದಿರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮಾರ್ಚ್ 6ರಂದು ಮಂಡನೆಯಾಗಲಿರುವ ಬಜೆಟ್ ಈ ಎಲ್ಲಾ ನಿರೀಕ್ಷೆಗಳನ್ನು ಎಷ್ಟರ ಮಟ್ಟಿಗೆ ಪೂರೈಸಲಿದೆ ಎಂಬುದನ್ನು ಕಾದು ನೋಡಬೇಕಿದೆ.








