ಕರ್ನಾಟಕ ಗ್ರಾಮಗಳಲ್ಲಿ ಮಹಾರಾಷ್ಟ್ರ ಯೋಜನೆ : ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ…
ಮಹಾರಾಷ್ಟ್ರ ಸರ್ಕಾರ ಮತ್ತೆ ಖ್ಯಾತೆ ತೆಗೆದಿದೆ. ಕರ್ನಾಟಕಕ್ಕೆ ರಾಜ್ಯ ಗಡಿಗೆ ಸೇರಿದ 865 ಹಳ್ಳಿಗಳಲ್ಲಿ ತಮ್ಮ ರಾಜ್ಯದ ಆರೋಗ್ಯ ಯೋಜನೆ ತರಲು ಮುಂದಾಗಿರುವುದನ್ನ ಖಂಡಿಸಿ ಕಾಂಗ್ರೆಸ್ ಸರ್ಕಾರ ತೀವ್ರ ತಾರಾಟೆಗೆ ತೆಗೆದುಕೊಂಡಿದೆ. ಈ ಕುರಿತು ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ಎರಡೂ ರಾಜ್ಯಗಳ ಬಿಜೆಪಿ ಸರ್ಕಾರವನ್ನ ಖಂಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ “ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರವನ್ನು ಕೇಂದ್ರ ಬಿಜೆಪಿ ಸರ್ಕಾರ ಕೂಡಲೇ ವಜಾ ಮಾಡಬೇಕು, ರಾಜ್ಯದ ಹಿತ ಕಾಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ.
ಮಹಾರಾಷ್ಟ್ರ ಸರ್ಕಾರವು ಕರ್ನಾಟಕದ ಗಡಿಯೊಳಗಿರುವ 865 ಹಳ್ಳಿಗಳಿಗೆ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ ಎಂಬ ಕಾರ್ಯಕ್ರಮವನ್ನು ನೀಡಲು ಹೊರಟಿರುವುದು ನಾಡಿನ ಸಾರ್ವಭೌಮತೆ ಮತ್ತು ಒಕ್ಕೂಟ ವ್ಯವಸ್ಥೆಗೆ ಹಾಕಿರುವ ಸವಾಲು.
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಹಂಚಿಕೆಗೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ. ಮಹಾರಾಷ್ಟ್ರ ಸರ್ಕಾರ ಕಟ್ಟುಪಾಡು ಮೀರಿ ಕರ್ನಾಟಕದ ಜನರಿಗೆ ಯೋಜನೆ ಘೋಷಿಸಿದರೂ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಸುಮ್ಮನಿರುವುದು ನೋಡಿದರೆ ಸರ್ಕಾರಗಳು ಸತ್ತಿವೆಯಾ? ಎಂಬ ಅನುಮಾನ ಬರುತ್ತಿದೆ.
ನಮ್ಮ ರಾಜ್ಯದ ಒಂದಿಂಚು ಭೂಮಿಯನ್ನು ಬೇರೆಯವರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಭಾಷೆ, ಸಂಸ್ಕೃತಿ, ನೆಲ, ಜಲ ಇವು ಆರೂವರೆ ಕೋಟಿ ಕನ್ನಡಿಗರ ಹಕ್ಕು ಮತ್ತು ಸಾರ್ವಭೌಮತೆಯ ಸಂಕೇತ. ಇದಕ್ಕೆ ಚ್ಯುತಿಯಾದರೆ ನಾವು ಸುಮ್ಮನಿರುವುದಿಲ್ಲ. ಪದೇ ಪದೇ ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಟ್ವೀಟ್ ಮಾಡಿದ್ದಾರೆ.
Karnataka : Maharashtra project in the border villages of the state: Siddaramaiah sparks against the government…