ಕೇರಳ ಗಡಿ ಸಂಚಾರ ನಿರ್ಬಂಧ: ರಾಜ್ಯ ಸರಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ
ಕೊರೋನಾ ಹೆಚ್ಚುತ್ತಿರುವ ಭೀತಿಯಲ್ಲಿ ಪದೇ ಪದೇ ಕೇರಳ ಗಡಿ ಭಾಗದಲ್ಲಿ ಸಂಚಾರ ನಿರ್ಬಂಧಿಸುವ ರಾಜ್ಯ ಸರಕಾರದ ಕ್ರಮಕ್ಕೆ ಹೈಕೋರ್ಟ್ನಿಂದ ಅಸಮಾಧಾನ ವ್ಯಕ್ತಪಡಿಸಿದೆ.
ಹೈಕೋರ್ಟ್ ಮುಂದೆ ರಾಜ್ಯ ಸರ್ಕಾರ ತನ್ನ ನಿಲುವು ಸಮರ್ಥಿಸಿಕೊಳ್ಳಲು ಸಾಕಷ್ಟು ಪ್ರಯತ್ನಿಸಿತ್ತು. ಆದರೆ ತನ್ನ ನಿರ್ಣಯಕ್ಕೆ ಸೂಕ್ತ ಕಾನೂನಿನ ಬೆಂಬಲ ಸಿಗದೆ ಕೊನೆಗೂ ಗಡಿ ನಿರ್ಬಂಧಿಸುವ ನಿರ್ಧಾರದಿಂದ ಹಿಂದೆ ಸರಿದಿದೆ.
ಗಡಿ ನಿರ್ಬಂಧ ಕುರಿತು ಹೈಕೋರ್ಟ್ಗೆ ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲೆ ಮೂಲಕ ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮತ್ತು ಸರಕು ವಾಹನಗಳ ಆಗಮನ-ನಿರ್ಗಮನದ ಮೇಲೆ ಯಾವುದೇ ನಿರ್ಬಂಧ ಹೇರುವುದಿಲ್ಲ.
ಈ ವಿಚಾರದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಗಳ ಪಾಲನೆಗೆ ಬದ್ಧವಿರುತ್ತೇವೆ ಎಂದು ತಿಳಿಸಿದೆ.
ಕೇರಳದ ಕಾಸರಗೋಡು ಭಾಗದ ಜನರು ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಹೋಗುವುದಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿ ಆದೇಶಿಸಿತ್ತು.
ಇದರಿಂದಾಗಿ ವಿದ್ಯಾರ್ಥಿಗಳು, ವ್ಯಾಪಾರಿಗಳು, ಕಾರ್ಮಿಕರು ಕೆಲಸಕ್ಕೆ ಬಂದು ಹೋಗುವುದಕ್ಕೆ ತೀವ್ರ ತೊಂದರೆಯಾಗಿತ್ತು. ಇದನ್ನು ಪ್ರಶ್ನಿಸಿ ಕಾಸರಗೋಡಿನ ವಕೀಲ ಬಿ.ಸುಬ್ಬಯ್ಯ ರೈ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.