ಬೆಂಗಳೂರು ; ರೈತರು ಬೆಳೆದ ತರಕಾರಿ, ಹೂ-ಹಣ್ಣುಗಳನ್ನು ಸರ್ಕಾರವೇ ಖರೀದಿಸಲಿದೆ ಎಂಬ ಮುಖ್ಯಮಂತ್ರಿಗಳ ಹೇಳಿಕೆ ಕೇವಲ ಕಾಗದ ಪತ್ರಗಳ ಮೇಲಿದೆ. ಆದರೆ, ರೈತರು ತಾವೇ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆಗೆ ತಂದರೆ ಅವಕಾಶ ನೀಡದೆ ಪೊಲೀಸರು ಕಿರುಕುಳ ಕೊಟ್ಟು ಓಡಿಸುತ್ತಿದ್ದಾರೆ, ದಲ್ಲಾಳಿಗಳು ಶೋಷಣೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ನಿನ್ನೆ ತಡರಾತ್ರಿ ಕೆ.ಆರ್ ಪುರಂ ಮಾರುಕಟ್ಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿ ತರಕಾರಿ ಮಾರಾಟ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿದ್ದ ನೂರಾರು ರೈತರ ಜತೆ ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ, ದೇವನಹಳ್ಳಿ ಮತ್ತಿತರ ಕಡೆಯ ರೈತರು ತಾವು ಬೆಳೆದ ತರಕಾರಿ, ಹಣ್ಣು, ಹೂವು ಉತ್ಪನ್ನಗಳನ್ನು ತಂದು ಹಲವಾರು ವರ್ಷಗಳಿಂದ ಬೆಂಗಳೂರಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.
ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ರೈತರು ತಮ್ಮ ಉತ್ಪನ್ನ ಮಾರಾಟ ಮಾಡಲು ಅವಕಾಶ ನೀಡುತ್ತಿಲ್ಲ. ಪೊಲೀಸರು ರೈತರ ವಾಹನಗಳನ್ನು ತಡೆದು ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು. ಸ್ಥಳದಿಂದಲೇ ಸಹಕಾರ ಮತ್ತು ತೋಟಗಾರಿಕೆ ಸಚಿವರನ್ನು ದೂರವಾಣಿಯಲ್ಲಿ ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಅವರಿಬ್ಬರು ಫೋನ್ ಕರೆ ಸ್ವೀಕರಿಸಲಿಲ್ಲ ಎಂದು ಡಿಕೆಶಿ ಕಿಡಿಕಾರಿದರು.