ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Poojary) ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದ್ದಾರೆ.
ಕೋಟಾ ಶ್ರೀನಿವಾಸ್ ಪೂಜಾರಿಗೆ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಸುರೇಶ್ ಕುಮಾರ್, ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಪ್ರತಾಪ್ ಸಿಂಹ ನಾಯಕ್, ಶಾಂತರಾಮ್ ಸಿದ್ದಿ ಸಾಥ್ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ, ಒಂದು ವಾರದ ಕೆಳಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ಸದನದ ಒಳಗೆ, ಹೊರಗೂ ಪ್ರಸ್ತಾಪ ಮಾಡಿದ್ದರು. ಯಾವುದೇ ಖಾತೆ ನಿಭಾಯಿಸಿದ್ದರೂ 1 ರೂ. ಭ್ರಷ್ಟಾಚಾರ ಮಾಡಿಲ್ಲ. ಒಂದು ವೇಳೆ ಭ್ರಷ್ಟಾಚಾರ ಮಾಡಿದ್ದರೇ ಸಿಬಿಐಗೆ ವಹಿಸಿ ಎಂದು ಪತ್ರ ಬರೆದಿದ್ದೆ. ಇಲ್ಲವಾದರೆ, ಪ್ರತಿಭಟನೆ ಮಾಡುವುದಾಗಿ ಹೇಳಿದ್ದೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಪ್ರತಿಭಟನೆ ನಡೆಸುತ್ತಿದ್ದಾನೆ.
ನನಗೆ ಸದನದ ಒಳಗೆ ಪ್ರತಿಭಟಿಸಲು ಅವಕಾಶ ಇಲ್ಲ. ನಾನು ಸಂಸದನಾಗಿದ್ದರಿಂದಾಗಿ ನನ್ನ ಮೇಲೆ ಮಾಡಿರುವ ಆರೋಪವನ್ನು ಹಿಂಪಡೆಯಬೇಕು. ಇಲ್ಲವಾದರೆ ಸಿಬಿಐ ತನಿಖೆಗೆ ವಹಿಸುವಂತೆ ಕೋಟಾ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದ್ದಾರೆ.








