ಬೆಂಗಳೂರು : ರಾಜ್ಯ ಕಾಂಗ್ರೆಸ್ ನೂತನ ಸಾರಥಿ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಿಗ್ಗೆ 11.30ಕ್ಕೆ ಬರೋಬ್ಬರಿ 10 ಲಕ್ಷ ಮಂದಿ ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಕಟ್ಟಪ್ಪ ಶಿವಕುಮಾರ್ ಕೆಪಿಸಿಸಿಯ 41ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.
ಈಗಾಗಲೇ ಬೆಂಗಳೂರಿನ ಕೆಪಿಸಿಸಿ ಕಚೇರಿ ಹಿಂಭಾಗದಲ್ಲಿರುವ ನೂತನ ಸಭಾಂಗಣದಲ್ಲಿ ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲು ಪ್ರತಿಜ್ಞಾ ಕಾರ್ಯಕ್ರಮದ ವೇದಿಕೆ ಸಜ್ಜುಗೊಂಡಿದೆ.
ರಾಜ್ಯಾದ್ಯಂತ ಬರೋಬ್ಬರಿ 10 ಲಕ್ಷ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಜೊತೆ ಧ್ವನಿಗೂಡಿಸಿ ಸಂವಿಧಾನ ಪೀಠಿಕೆ ಓದುವ ಹಾಗೂ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಶಿವಕುಮಾರ್ ಪದಗ್ರಹಣಕ್ಕೆ ಸಾಥ್ ನೀಡಲಿದ್ದಾರೆ. ಇನ್ನು ಈ ಕಾರ್ಯಕ್ರಮ ವೀಕ್ಷಣೆಗೆ ರಾಜ್ಯಾದ್ಯಂತ 7,800 ಕಡೆ ವ್ಯವಸ್ಥೆ ನಡೆಸಲಾಗಿದೆ. ಜ್ಯೂಮ್ ಆಪ್ ಮೂಲಕ ನೇರವಾಗಿ ಕಾರ್ಯಕ್ರಮ ವೀಕ್ಷಿಸುವ ಹಾಗೂ ಪ್ರತಿಕ್ರಿಯೆ ವ್ಯಕ್ತಪಡಿಸುವ ತಾಂತ್ರಿಕ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹ ಎಲ್ಲೆ ಮೀರಿದ್ದು, ಪ್ರತಿನಗರ, ಪಟ್ಟಣ, ಗ್ರಾಮಗಳಲ್ಲಿ ಡಿಕೆ.ಶಿವಕುಮಾರ್ ಅವರಿಗೆ ಶುಭ ಕೋರುವ ಬ್ಯಾನರ್ ಗಳು ರಾರಾಜಿಸುತ್ತಿವೆ.