“ಕುಮಾರಸ್ವಾಮಿ ಅವರ ರಾಜಕಾರಣ ಅವರಿಗೇ ಗೊತ್ತು. ನಮಗೆ ಗೊತ್ತಿಲ್ಲ. ಅವರ ರಾಜಕೀಯವೇ ಬೇರೆ, ಅವರ ಪಕ್ಷ ಹಾಗೂ ಕಾರ್ಯಕರ್ತರ ರಾಜಕಾರಣವೇ ಬೇರೆ. ಎನ್ ಡಿಎ ಮೈತ್ರಿ ರಾಜಕಾರಣವೇ ಬೇರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾತನಾಡಿ, ನಾನು ಯೋಗೇಶ್ವರ್ ಅವರನ್ನು ಭೇಟಿ ಮಾಡಿಲ್ಲ, ಮಾತೂ ಆಡಿಲ್ಲ. ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗೆ ನೀಡಬೇಕಾದ ಗೌರವ ಕೊಟ್ಟಿದ್ದೇನೆ. ಅದರ ಹೊರತಾಗಿ ನಮ್ಮ ಮಧ್ಯೆ ಯಾವುದೇ ಭೇಟಿ, ಚರ್ಚೆ ನಡೆದಿಲ್ಲ ಎಂದಿದ್ದಾರೆ.
ಬೇರೆ ಪಕ್ಷದವರನ್ನು ಸಂಪರ್ಕಿಸುವ ಅವಶ್ಯಕತೆ ಸಧ್ಯಕ್ಕಿಲ್ಲ ಎಂದು ನಾನು ನಮ್ಮ ಪಕ್ಷದವರಿಗೂ ಹೇಳಿದ್ದೇನೆ. “ನಾನು ಅವರ ಪಕ್ಷ ಹಾಗೂ ಎನ್ ಡಿಎ, ಕುಮಾರಸ್ವಾಮಿ, ಯೋಗೇಶ್ವರ್, ದಳದ ವಿಚಾರವಾಗಿ ಮಾತನಾಡುವುದಿಲ್ಲ. ಕಳೆದ ಐದು ವರ್ಷಗಳಿಂದ ಕುಮಾರಸ್ವಾಮಿ ಅವರು ಆಡಿರುವ ಮಾತುಗಳನ್ನು ನೋಡಿಕೊಂಡು ಬನ್ನಿ. ಅವರು ಎಂದಿಗೂ ತಮ್ಮ ಮಾತಿಗೆ ಬದ್ಧವಾಗಿ ನಿಂತಿಲ್ಲ. ಹೀಗಾಗಿ ಅವರ ನಿಲುವಿನ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರು ಸಾರ್ವಜನಿಕವಾಗಿ ಮಾತನಾಡುವುದೇ ಬೇರೆ, ಆಂತರಿಕವಾಗಿ ಮಾತನಾಡುವುದೇ ಬೇರೆ. ಆ ರೀತಿ ಮಾತನಾಡುವುದೇ ಅವರ ತಂತ್ರಗಾರಿಕೆ ಇರಬಹುದು. ಅದಕ್ಕೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ. ನಮ್ಮ ಕಾರ್ಯಕರ್ತರನ್ನು ಕರೆಸಿ ಯಾರೇ ನಿಂತರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಅವರಿಗೆ ಸೂಚನೆ ನೀಡಿದ್ದೇವೆ ಎಂದಿದ್ದಾರೆ.
ಜೆಡಿಎಸ್ ಪಕ್ಷ ದುರ್ಬಲ ಎಂದು ನಾನು ಭಾವಿಸಿದರೆ ನನ್ನಂತ ಮೂರ್ಖ ಇನ್ಯಾರು ಇಲ್ಲ. ಆದರೆ ಕುಮಾರಸ್ವಾಮಿ ಇಷ್ಟು ದುರ್ಬಲರಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಕೇಂದ್ರ ಸಚಿವರಾಗಿರುವ ಅವರು ಎಲ್ಲರ ಕೈಕಾಲು ಕಟ್ಟಿಕೊಂಡು ನಮ್ಮ ಚಿಹ್ನೆಯಿಂದ ಸ್ಪರ್ಧೆ ಮಾಡಿ ಎಂದು ಬಿಜೆಪಿಯವರಿಗೆ ಹೇಳುವಷ್ಟು ದುರ್ಬಲರಾಗಿದ್ದಾರೆ ಎಂದು ಭಾವಿಸಿರಲಿಲ್ಲ” ಎಂದು ಲೇವಡಿ ಮಾಡಿದ್ದಾರೆ.
ಶೇ 80 ರಷ್ಟು ಕಾರ್ಯಕರ್ತರು ಸುರೇಶ್ ಅವರ ಸ್ಪರ್ಧೆಗೆ ಬೇಡಿಕೆ ಇಟ್ಟಿದ್ದಾರೆ. ಹೈಕಮಾಂಡ್ ಯಾರನ್ನು ಕಣಕ್ಕಿಳಿಸುತ್ತಾರೆ ಅವರ ಪರವಾಗಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಸ್ಪಷ್ಟಪಡಿಸಿದ್ದೇನೆ. ಲೋಕಸಭೆ ಚುನಾವಣೆ ಸೋಲಿನ ಆಘಾತದಿಂದ ನಾವಿನ್ನೂ ಹೊರಗೆ ಬಂದಿಲ್ಲ. ಸುರೇಶ್ ಅಷ್ಟರ ಮಟ್ಟಿಗೆ ಕೆಲಸ ಮಾಡಿದ್ದಾರೆ. ಕಡಿಮೆ ಅಂತರದಲ್ಲಿ ಸೋತಿದ್ದರೆ ಒಂದು ಪಕ್ಷ ಸುಧಾರಿಸಿಕೊಳ್ಳಬಹುದಿತ್ತು. ಹೀಗಾಗಿ ನಾವು ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ಮಾತ್ರಕ್ಕೆ ಜನರ ಸೇವೆಯನ್ನು ಬಿಡಲು ಆಗುವುದಿಲ್ಲ ಎಂದಿದ್ದಾರೆ.