ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಹೈಕಮಾಂಡ್ ಅಂಗಳದಲ್ಲಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಧರ್ಮವನ್ನು ಪಾಲಿಸದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಕರ್ನಾಟಕದ ಕಮಲ ನಾಯಕರ ನಡೆಯ ಬಗ್ಗೆ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ನೇರವಾಗಿಯೇ ದೂರು ನೀಡಿದ್ದಾರೆ.
ನವದೆಹಲಿಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು, ಕರ್ನಾಟಕದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ನಾಯಕರಾದ ನಿತಿನ್ ನವೀನ್ ಹಾಗೂ ಆರೋಗ್ಯ ಸಚಿವ ಮತ್ತು ಪಕ್ಷದ ಮಾಜಿ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರನ್ನು ಕೂಡ ಭೇಟಿಯಾಗಿ ಚರ್ಚಿಸಿದ್ದರು. ಈ ಎಲ್ಲಾ ಭೇಟಿಗಳ ಹಿಂದಿನ ಪ್ರಮುಖ ಉದ್ದೇಶ ರಾಜ್ಯ ಬಿಜೆಪಿ ನಾಯಕರ ಕಡೆಗಣಿಸುವ ಧೋರಣೆಯ ವಿರುದ್ಧ ಹೈಕಮಾಂಡ್ ಗಮನ ಸೆಳೆಯುವುದೇ ಆಗಿತ್ತು ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಇತ್ತೀಚೆಗೆ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಕನಿಷ್ಠ ಸೌಜನ್ಯಕ್ಕಾದರೂ ಮೈತ್ರಿ ಪಕ್ಷವಾದ ಜೆಡಿಎಸ್ ನಾಯಕರ ಅಭಿಪ್ರಾಯ ಕೇಳಿಲ್ಲ ಎಂದು ಅಮಿತ್ ಶಾ ಅವರ ಗಮನಕ್ಕೆ ತರಲಾಗಿದೆ. ವಿಶೇಷವಾಗಿ ಆಗ್ನೇಯ ಪದವೀಧರರ ಕ್ಷೇತ್ರವನ್ನು ಈ ಹಿಂದೆ ಜೆಡಿಎಸ್ ಗೆದ್ದುಕೊಂಡಿತ್ತು. ಈ ಬಾರಿಯೂ ಆ ಕ್ಷೇತ್ರವನ್ನು ತಮಗೆ ಬಿಟ್ಟುಕೊಡುವಂತೆ ಜೆಡಿಎಸ್ ನಾಯಕರು ಮನವಿ ಮಾಡಿದ್ದರು.
ಆದರೆ ರಾಜ್ಯ ಬಿಜೆಪಿ ನಾಯಕರು ಮೈತ್ರಿ ಪಕ್ಷದ ಜೊತೆ ಯಾವುದೇ ಪ್ರಾಥಮಿಕ ಚರ್ಚೆ ನಡೆಸದೆ, ಕೋರ್ ಕಮಿಟಿ ಸಭೆಗಳಲ್ಲೂ ಪ್ರಸ್ತಾಪಿಸದೆ ನೇರವಾಗಿ ತಮ್ಮ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ರವಾನಿಸಿದ್ದಾರೆ. ಅಂತಿಮವಾಗಿ ಕೇವಲ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಮಾತ್ರ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಒಟ್ಟಾಗಿ ಚುನಾವಣೆ ಎದುರಿಸುವಾಗ ರಾಜ್ಯ ಬಿಜೆಪಿ ನಾಯಕರ ಈ ರೀತಿಯ ಅಸಹಕಾರ ಮತ್ತು ಏಕಪಕ್ಷೀಯ ಧೋರಣೆ ಒಕ್ಕೂಟ ವ್ಯವಸ್ಥೆಗೆ ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ರಾಷ್ಟ್ರೀಯ ನಾಯಕರ ಮುಂದೆ ಕಟುವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದರ ಜೊತೆಗೆ ಮುಂಬರುವ ರಾಜ್ಯಸಭಾ ಚುನಾವಣೆ ವಿಚಾರ ಕೂಡ ಮೈತ್ರಿ ನಾಯಕರ ನಡುವೆ ಹೊಸ ಹಗ್ಗಜಗ್ಗಾಟಕ್ಕೆ ವೇದಿಕೆ ಸೃಷ್ಟಿಸಿದೆ. ಜೂನ್ ತಿಂಗಳಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಾಲ್ವರು ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಳ್ಳಲಿದ್ದು, ಇದರಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಸ್ಥಾನವೂ ಸೇರಿದೆ.
ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಸುಲಭವಾಗಿ ಗೆಲುವು ಸಾಧಿಸಲಿದೆ. ಉಳಿದ ಒಂದು ಸ್ಥಾನವನ್ನು ಗೆಲ್ಲಲು ಬಿಜೆಪಿಗೆ ಜೆಡಿಎಸ್ ಬೆಂಬಲದ ಅಗತ್ಯವಿಲ್ಲ. ಆದರೂ ಮೈತ್ರಿ ಧರ್ಮದ ಆಧಾರದ ಮೇಲೆ ಹಾಗೂ ಹಿರಿಯ ನಾಯಕರಾಗಿರುವ ಕಾರಣಕ್ಕೆ ಈ ಏಕೈಕ ಸ್ಥಾನವನ್ನು ದೇವೇಗೌಡರಿಗೆ ಬಿಟ್ಟುಕೊಡಬೇಕು ಎಂಬುದು ಜೆಡಿಎಸ್ ಪಾಳೆಯದ ಬಲವಾದ ಆಗ್ರಹವಾಗಿದೆ.
ಆದರೆ ರಾಜ್ಯ ಬಿಜೆಪಿಯಲ್ಲಿ ಬಿ ಎಸ್ ಯಡಿಯೂರಪ್ಪ ಅವರ ಬಣವು ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರನ್ನು ರಾಜ್ಯಸಭೆಗೆ ಕಳುಹಿಸಲು ತೀವ್ರ ಕಸರತ್ತು ನಡೆಸುತ್ತಿದೆ. ಈ ವಿಚಾರವೂ ಇದೀಗ ಹೈಕಮಾಂಡ್ ಮೆಟ್ಟಿಲೇರಿದ್ದು, ರಾಜ್ಯಸಭಾ ಟಿಕೆಟ್ ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಪಕ್ಷಕ್ಕೆ ಆಗುತ್ತಿರುವ ಮುಜುಗರವನ್ನು ಕುಮಾರಸ್ವಾಮಿ ಅವರು ಅಮಿತ್ ಶಾ ಅವರ ಬಳಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಒಟ್ಟಾರೆಯಾಗಿ ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಎನ್ ಡಿ ಎ ಮೈತ್ರಿಕೂಟವನ್ನು ಇನ್ನಷ್ಟು ಸಮನ್ವಯದಿಂದ ಕೊಂಡೊಯ್ಯಬೇಕಾದ ಸಮಯದಲ್ಲಿ, ಟಿಕೆಟ್ ಹಂಚಿಕೆ ವಿಚಾರದಲ್ಲಿ ರಾಜ್ಯ ನಾಯಕರ ನಡುವೆ ಭಿನ್ನಮತ ಭುಗಿಲೆದ್ದಿರುವುದು ಸ್ಪಷ್ಟವಾಗಿದೆ. ಇದೀಗ ಚೆಂಡು ಅಮಿತ್ ಶಾ ಹಾಗೂ ರಾಷ್ಟ್ರೀಯ ನಾಯಕರ ಅಂಗಳದಲ್ಲಿದ್ದು, ರಾಜ್ಯ ಬಿಜೆಪಿ ನಾಯಕರ ಏಕಪಕ್ಷೀಯ ನಡೆಗಳಿಗೆ ದೆಹಲಿ ವರಿಷ್ಠರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸಲಿದ್ದಾರೆ ಕಾದು ನೋಡಬೇಕಿದೆ.







