ನನ್ನ ಹೆಸರಲ್ಲೇ ರಾಮನಿದ್ದಾನೆ, ಗಾಂಧಿಯಂತೆ ನಾನು ರಾಮಭಕ್ತ : ಸಿದ್ದರಾಮಯ್ಯ
ಮಂಗಳೂರು : ದೇಶಕ್ಕೆ ಬೇಕಾಗಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ? ರಾಮಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು
ಒಂದು ಕಾಲದಲ್ಲಿ ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ ನಾಯಕರು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಇಲ್ಲಿನ ಜನ ಪರಸ್ಪರ ಅಪನಂಬಿಕೆಯಿಂದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಆರ್.ಎಸ್.ಎಸ್ ಮತ್ತು ಬಿಜೆಪಿಯೇ ಕಾರಣ.
ದೇಶಪ್ರೇಮದ ಪಾಠ ಮಾಡುವ ಬಿಜೆಪಿ ನಾಯಕರು ತಮ್ಮ ಇತಿಹಾಸವನ್ನೊಮ್ಮೆ ನೆನಪು ಮಾಡಿಕೊಳ್ಳಲಿ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ ನಾಯಕರು ಬಲಿದಾನಗೈದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣಾರ್ಪಣೆ ಮಾಡಿದ ಒಬ್ಬನೇ ಒಬ್ಬ ಆರ್.ಎಸ್.ಎಸ್ ನಾಯಕನ ಹೆಸರನ್ನು ಬಿಜೆಪಿಯವರು ಹೇಳಲಿ ನೋಡೋಣ.
ಹೆಡ್ಗೇವಾರ್, ಗೊಲ್ವಾಲ್ಕರ್ ಇವರೆಲ್ಲ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ. ಇಂಥವರ ದೇಶಪ್ರೇಮದ ಪಾಠ ಯಾರಿಗೆ ಬೇಕಿದೆ ಸ್ವಾಮಿ?
ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು 3 ಕೆ.ಜಿ ಗೆ ಇಳಿಸಿ ಬಡಜನರ ಊಟ ಕಸಿದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ನನಗಿದೆ. ಆಗ ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆ.ಜಿ ಅಕ್ಕಿ ನೀಡುತ್ತೇವೆ.
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ? ರಾಮಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.