ಕೊಡಗಿನ ಪ್ರವಾಸಿ ತಾಣಗಳ ಬಂದ್ ಗೆ ಸ್ಥಳೀಯರ ಆಗ್ರಹ
ಮಡಿಕೇರಿ : ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ರಾಕೇಟ್ ವೇಗದದಲ್ಲಿ ಏರುತ್ತಿವೆ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಜಿಲ್ಲೆಯ ಮಂದಿಯಲ್ಲಿ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳಕ್ಕೆ ಪ್ರವಾಸಿ ತಾಣಗಳೇ ಕಾರಣ ಎಂದು ಕೂಡಲೇ ಅವುಗಳನ್ನ ಬಂದ್ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಹಿಂದೆ ಜಿಲ್ಲೆಯಲ್ಲಿ ಮೂರು ನಾಲ್ಕು ಕೊರೊನಾ ಕೇಸ್ ಗಳು ಪತ್ತೆಯಾಗುತ್ತಿದ್ದವು. ಆದ್ರೆ ಇದೀಗ 20 ರಿಂದ 25ಕ್ಕೆ ಏರಿಕೆಯಾಗಿದೆ. ಇದು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ. ಹೀಗಾಗಿ ಪ್ರವಾಸಿ ತಾಣಗಳನ್ನು ಬಂದ್ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಜನತೆ ಒತ್ತಾಯಿಸುತ್ತಿದ್ದಾರೆ.
ಅಂದಹಾಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಏಪ್ರಿಲ್ 2 ರಂದು ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳನ್ನು ಏ.20ರ ವರೆಗೆ ಬಂದ್ ಮಾಡಿ ಎಂದು ಆದೇಶ ಹೊರಡಿಸಿದ್ದರು. ಆದರೆ ಕೆಲವರ ಒತ್ತಡದಿಂದ ಆದೇಶ ಹಿಂಪಡೆಯಲಾಗಿದ್ದು, ಮತ್ತೆ ಪ್ರವಾಸಿ ತಾಣಗಳನ್ನು ತೆರೆಯುವಂತೆ ಮಾಡಿದೆ.
ಹೀಗಾಗಿಯೇ ಏಪ್ರಿಲ್ 9 ರಿಂದ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳನ್ನು ಪ್ರವಾಸಿಗರಿಗೆ ಮುಕ್ತ ಮಾಡಲಾಗಿದೆ. ಇದು ಜಿಲ್ಲೆಯಲ್ಲಿ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ.
ಅಲ್ಲದೆ ಪ್ರವಾಸಿಗರು ಕೊರೊನಾ ನಿಮಯಗಳನ್ನ ಪಾಲನೆ ಮಾಡದೇ ಇರುವುದು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಉಲ್ಬಣಗೊಳ್ಳುವ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ಯಾರ ಒತ್ತಾಯಕ್ಕೂ ಮಣಿಯದೆ ಜಿಲ್ಲೆಯ ಪ್ರವಾಸಿತಾಣಗಳನ್ನು ಬಂದ್ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.