ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕೇಂದ್ರ ಸರ್ಕಾರ ಸದ್ಯ ಸಮಾಧಾನ ನೀಡಬಹುದು ಎನ್ನಲಾಗುತ್ತಿದೆ. 2024ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜನರ ಹೊರೆ ತಪ್ಪಿಸಲು ಕೇಂದ್ರ ಸರ್ಕಾರ ಮುಂದಾಗಿ, ಮೂರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿದೆ ಎನ್ನಲಾಗುತ್ತಿದೆ.
ತನ್ನ ಮಹತ್ವಾಕಾಂಕ್ಷೆಯ ಹರ್ ಘರ್ ಜಲ್ ಯೋಜನೆಗೆ ವೇಗ ನೀಡುವುದು, ಎಪ್ ಪಿಜಿ ದರ ಇಳಿಸುವುದು ಹಾಗೂ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ವಯ ನೀಡುವ ನಗದನ್ನು ಹೆಚ್ಚಳ ಮಾಡುವುದು ಸರ್ಕಾರದ ಯೋಜನೆಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇಲ್ಲಿಯವರೆಗೆ ಕನಿಷ್ಠ ಶೇ. 67ರಷ್ಟು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ. 4 ವರ್ಷಗಳ ಹಿಂದೆ ಜಲ ಜೀವನ್ ಮಿಷನ್ ಜಾರಿಗೂ ಮೊದಲು ಈ ಪ್ರಮಾಣ ಶೇ. 17ರಷ್ಟಿತ್ತು. 2024ರ ವೇಳೆಗೆ 100ರಷ್ಟು ಮನೆಗಳಿಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಗುರಿ ಹಾಕಿಕೊಳ್ಳಲಾಗಿದೆ. ಹೀಗಾಗಿ ಸರ್ಕಾರ ಈ ಕಾರ್ಯಕ್ಕೆ ವೇಗ ನೀಡಿದೆ.
ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳ ಬಿಜೆಪಿಗೆ ದೊಡ್ಡ ಹೊಡೆತ ನೀಡಿದೆ. ಈ ವರ್ಷ 5 ರಾಜ್ಯಗಳ ವಿಧಾನಸಭೆ ಚುನಾವಣೆಯ ಜೊತೆಗೆ ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ, ಕಳೆದ 3 ವರ್ಷಗಳಲ್ಲಿ ಎಲ್ ಪಿಜಿ ಸಿಲಿಂಡರ್ ದರ ಮೂರು ಪಟ್ಟು ಹೆಚ್ಚಳವಾಗಿದ್ದು, ಅದನ್ನು ತಗ್ಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.
ದೇಶಾದ್ಯಂತ ರೈತರು ಕಿಸಾನ್ ಸಮ್ಮಾನ್ ನಿಧಿಯ ಮೊತ್ತ ಹೆಚ್ಚಳ ಮಾಡಬೇಕೆಂಬ ಇಚ್ಛೆ ವ್ಯಕ್ತಪಡಿಸಿರುವ ಕೇಂದ್ರ, ವಾರ್ಷಿಕ 6 ಸಾವಿರ ರೂ.ಗಳ ಮೊತ್ತ ಹೆಚ್ಚಿಸಲು ಚಿಂತನೆ ನಡೆಸಿದೆ.