ಬೆಂಗಳೂರು : ಜೂನ್ 19 ರಂದು ನಡೆಯಲಿರುವ ರಾಜ್ಯಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ವಿಧಾನಸಭಾ ಕಾರ್ಯದರ್ಶಿಗಳೂ ಆದ ಚುನಾವಣಾಧಿಕಾರಿ ಎಂ ಕೆ ವಿಶಾಲಾಕ್ಷಿ ಅವರಿಗೆ ಇಂದು ನಾಮಪತ್ರ ಸಲ್ಲಿಸಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಮತ್ತು ಆರ್ ವಿ ದೇಶಪಾಂಡೆ ಈ ಸಂದರ್ಭದಲ್ಲಿ ಹಾಜರಿದ್ದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಗೆ ನಮ್ಮನ್ನು ಆಯ್ಕೆ ಮಾಡಲು ನಿರ್ಧರಿಸಿರುವ ಎಐಸಿಸಿ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತುಂಬು ಹೃದಯದ ಧನ್ಯವಾದಗಳು ಹಾಗೂ ಕೃತಜ್ಞತೆ ಸಲ್ಲಿಸುತ್ತೇನೆ.
ಚುನಾವಣೆ ನಡೆದರೆ ಕರ್ನಾಟಕ ವಿಧಾನಸಭೆ ಎಲ್ಲ ಶಾಸಕರು ನನಗೆ ಮತ ಹಾಕಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ನಮ್ಮ ನಾಯಕರು ನನ್ನ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಅಪೇಕ್ಷೆ ಉಲಿಸಿಕೊಳ್ಳುವಂತೆ ಮುಂದಿನ ದಿನಗಳಲ್ಲಿ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.
ಇದೆ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ರಾಜ್ಯಕ್ಕೆ ಸೀಮಿತವಾದ ನಾಯಕರಲ್ಲ. ರಾಷ್ಟ್ರಕ್ಕೆ ಸೀಮಿತವಾದ ನಾಯಕ. ಅರಲ್ಲಿ ರಾಷ್ಟ್ರ ನಾಯಕನ ಗುಣಗಳಿವೆ. ಹೀಗಾಗಿ ಅವರು ರಾಷ್ಟ್ರದ ಆಸ್ತಿ. ಕಳೆದ ಐದು ವರ್ಷಗಳ ಕಾಲ ಅವರು ವಿರೋಧ ಪಕ್ಷದಲ್ಲಿದ್ದು ಮಾಡಿದ ಕಾರ್ಯ ಹಾಗೂ ಅವರ ಅನುಭವ ಅತ್ಯುತ್ತಮವಾದುದು. ಅದಕ್ಕೆ ಪರ್ಯಾಯವಿಲ್ಲ. ಅವರ ಕಾರ್ಯ ನೋಡಿ ದೇಶದ ಮೂಲೆ ಮೂಲೆಯಿಂದ ಬೇರೆ ಪಕ್ಷಗಳ ನಾಯಕರೂ ಕೂಡ ಖರ್ಗೆ ಅವರನ್ನು ರಾಜ್ಯಸಭೆಯಿಂದ ಆರಿಸಿ ಸಂಸತ್ತಿಗೆ ಕಳುಹಿಸಬೇಕು ಎಂದು ಒತ್ತಡ ಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕರೆಲ್ಲರೂ ಕೂತು ಚರ್ಚೆ ನಡೆಸಿ ಒಮ್ಮತದ ನಿರ್ಧಾರಕ್ಕೆ ಬಂದೆವು. ನಮ್ಮ ಒಮ್ಮತದ ನಿರ್ಧಾರ ಕಂಡು ನಮ್ಮ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಖುಷಿಪಟ್ಟು ಎರಡನೇ ಮಾತಿಗೆ ಅವಕಾಶ ನೀಡದೇ ಖರ್ಗೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತು. ಇದರಿಂದ ದೇಶದ ಎಲ್ಲ ಕಾರ್ಯಕರ್ತರಿಗೆ ಸಂತೋಷ ತಂದಿದೆ.
ಮುಂದಿನ ದಿನಗಳಲ್ಲಿ ರಾಜ್ಯದಿಂದ ಆಯ್ಕೆಯಾಗುವ ಖರ್ಗೆ ಅವರು ರಾಷ್ಟ್ರದ ಎಲ್ಲ ವರ್ಗದ ಜನರ ಸಮಸ್ಯೆಗೆ ಧ್ವನಿಯಾಗಿ ಹೋರಾಟ ಮಾಡಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ನಮ್ಮ ಪಕ್ಷಕ್ಕೆ ಶಕ್ತಿಯಾಗಿರುವ ಖರ್ಗೆ ಅವರನ್ನು ರಾಜ್ಯಸಭೆಗೆ ಕಳುಹಿಸಲು ಅವಕಾಶ ಮಾಡಿಕೊಟ್ಟ ನಮ್ಮ ನಾಯಕಿ ಸೋನಿಯಾ ಗಾಂಧಿ ಅವರಿಗೆ ನಮ್ಮ ಶಾಸಕಾಂಗ ಪಕ್ಷದ ನಾಯಕರ ನೇತೃತ್ವದಲ್ಲಿ ಎಲ್ಲ ಶಾಸಕರು ಅಭಿನಂದನೆ ಸಲ್ಲಿಸಲು ತಿರ್ಮಾನಿಸಿದ್ದು, ಇದನ್ನು ಅವರಿಗೆ ಕಳುಹಿಸಿಕೊಡುತ್ತೇವೆ ಎಂದು ಹೇಳಿದರು.